ಜೈಪುರ: ಇದೇ ತಿಂಗಳ 31ರಂದು ವಿಧಾನಸಭೆಯ ಅಧಿವೇಶನ ಕರೆಯುವಂತೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಸಚಿವ ಸಂಪುಟವು ಎರಡನೇ ಬಾರಿಗೆ ಕಳುಹಿಸಿದ್ದ ಪ್ರಸ್ತಾವನೆಯನ್ನು ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಸೋಮವಾರ ತಿರಸ್ಕರಿಸಿದ್ದಾರೆ.
ಕಳೆದ ವಾರ ಮೊದಲ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದ ರಾಜ್ಯಪಾಲ ಮಿಶ್ರಾ ಅವರು, ತುರ್ತಾಗಿ ಅಧಿವೇಶನ ಕರೆಯುವ ಅಗತ್ಯ ಏನಿದೆ ಎಂಬುದು ಸೇರಿದಂತೆ ಕೆಲವು ಸ್ಪಷ್ಟೀಕರಣಗಳನ್ನು ಕೇಳಿದ್ದರು. ಹೀಗಾಗಿ ಗೆಹ್ಲೋಟ್ ಅವರು ಮತ್ತೊಮ್ಮೆ ಸಚಿವ ಸಂಪುಟ ಸಭೆ ಕರೆದು, ರಾಜ್ಯದಲ್ಲಿನ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಚರ್ಚಿಸಿದ ಬಳಿಕ ಅಧಿವೇಶನ ಕರೆಯುವ ಬಗ್ಗೆ ಎರಡನೇ ಸಲ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ, ರಾಜ್ಯಪಾಲರು ಈಗ ಅದನ್ನೂ ತಿರಸ್ಕರಿಸಿದ್ದು, ಮತ್ತೆ ಕೆಲವು ಸ್ಪಷ್ಟೀಕರಣಗಳನ್ನು ಕೇಳಿದ್ದಾರೆ ಎನ್ನಲಾಗಿದೆ.
ಬಂಡಾಯ ಶಾಸಕರ ಅನರ್ಹತೆ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ತೀರ್ಮಾನ ತೆಗೆದುಕೊಳ್ಳಬಾರದು ಎಂದು ರಾಜಸ್ಥಾನ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆಯಲು ಸ್ಪೀಕರ್ ಸಿ.ಪಿ.ಜೋಶಿ ಅವರಿಗೆ ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ. ಯಾವ ಕಾರಣಕ್ಕಾಗಿ ಅರ್ಜಿ ವಾಪಸ್ ಪಡೆದಿದ್ದಾರೆ ಎಂಬುದು ಗೊತ್ತಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.