ಜೈಪುರ: ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುವ ಶಾಸಕರು, ರಾಜ್ಯಸಭಾ ಚುನಾವಣೆ ಮುಗಿಯುವವರೆಗೆ ಜೊತೆಯಾಗಿ ಹೋಟೆಲ್ನಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಸೋಮವಾರ ತಿಳಿಸಿದ್ದಾರೆ.
‘ಶಾಸಕರು ಒಂದೇ ಕುಟುಂಬದವರಂತೆ ಜತೆಗಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಹೋಟೆಲ್ನಲ್ಲಿರಿಸಲಾಗಿದೆ. ಅಲ್ಲಿ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಚರ್ಚೆಗಳೂ ನಡೆಯುತ್ತಿವೆ’ ಎಂದು ಪಾಂಡೆ ಹೇಳಿದ್ದಾರೆ.
‘ಶಾಸಕರನ್ನು ಸೆಳೆದು, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿರುವ ಕಾರಣ ಈ ಬಗ್ಗೆ ಪೊಲೀಸರ ವಿಶೇಷ ತಂಡ ತನಿಖೆ ನಡೆಸುತ್ತಿದೆ’ ಎಂದಿದ್ದಾರೆ.
‘ನಮ್ಮ ಶಾಸಕರಲ್ಲಿ ಒಗ್ಗಟ್ಟಿದೆ. ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಸರ್ಕಾರಗಳನ್ನು ಉರುಳಿಸಿದ ರೀತಿಯಲ್ಲಿ ಇಲ್ಲಿನ ಸರ್ಕಾರವನ್ನು ಉರುಳಿಸಲು ಬಿಜೆಪಿಗೆ ಸಾಧ್ಯವಾಗದು’ ಎಂದೂ ಅವರು ಹೇಳಿದ್ದಾರೆ.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ರಮೇಶ್ ಮೀನಾ ಅವರ ಅನುಪಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿದ ಪಾಂಡೆ ‘ರಮೇಶ್ ಅವರು ವೈಯಕ್ತಿಕ ಕಾರಣಗಳಿಂದ ದೂರವಿದ್ದಾರೆ. ಆದರೆ, ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.