ಜೈಪುರ: ರಾಜಸ್ಥಾನ ಕಾಂಗ್ರೆಸ್ ಸರ್ಕಾರದ ವಿರುದ್ಧ ಶುಕ್ರವಾರ(ಆ.14) ಅವಿಶ್ವಾಸ ನಿರ್ಣಯವನ್ನು ಬಿಜೆಪಿ ಮಂಡಿಸಲಿದೆ ಎಂದು ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಠಾರಿಯಾ ತಿಳಿಸಿದರು.
ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೂಡಾ ಅಧಿವೇಶನದ ಆರಂಭದಲ್ಲೇ ವಿಶ್ವಾಸ ಮತ ಯಾಚನೆ ನಿರ್ಣಯ ಮಂಡಿಸಲಿದೆ. ಈ ಕುರಿತು ಗೆಹ್ಲೋಟ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ .
ಅಮಾನತು ರದ್ದು: ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದ, ಪೈಲಟ್ ಬೆಂಬಲಿಗರಾಗಿದ್ದ ಶಾಸಕರಾದ ಭನ್ವರ್ಲಾಲ್ ಶರ್ಮಾ ಹಾಗೂ ವಿಶ್ವೇಂದ್ರ ಸಿಂಗ್ ಅವರ ಅಮಾನತು ಆದೇಶವನ್ನು ಕಾಂಗ್ರೆಸ್ ಗುರುವಾರ ರದ್ದುಗೊಳಿಸಿದೆ.
ಕೈಕುಲುಕಿದ ಗೆಹ್ಲೋಟ್–ಸಚಿನ್: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಾಯಕತ್ವವನ್ನು ಬಹಿರಂಗವಾಗಿಯೇ ಟೀಕಿಸಿ ಬಂಡಾಯವೆದ್ದಿದ್ದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ಮತ್ತೆ ಕಾಂಗ್ರೆಸ್ ತೆಕ್ಕೆಗೆ ಮರಳಿದ್ದು, ಗುರುವಾರ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ತಿಂಗಳ ಬಳಿಕ ಪರಸ್ಪರ ಭೇಟಿಯಾದರು. ಹಿರಿಯ ನಾಯಕರ ಸಮ್ಮುಖದಲ್ಲಿ ಕೈಕುಲುಕಿದ ಗೆಹ್ಲೋಟ್ ಹಾಗೂ ಪೈಲಟ್ ವಿಜಯದ ಸಂಕೇತ ತೋರಿಸಿ ಕೈಬೀಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.