ನವದೆಹಲಿ: ರಾಜಸ್ಥಾನ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಚಿನ್ ಪೈಲಟ್ ವಜಾಗೊಂಡಿರುವುದಕ್ಕೆ ಪಕ್ಷದ ಹಿರಿಯ ನಾಯಕ ಶಶಿ ತರೂರ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಚಿನ್ ಪೈಲಟ್ ಅತ್ಯುತ್ತಮ ನಾಯಕ ಎಂದು ಬಣ್ಣಿಸಿದ್ದಾರೆ.
‘ಸಚಿನ್ ಪೈಲಟ್ ಅವರು ಕಾಂಗ್ರೆಸ್ನಿಂದ ನಿರ್ಗಮಿಸುತ್ತಿರುವುದು ಬೇಸರ ಉಂಟುಮಾಡಿದೆ. ಹೀಗಾಗಬಾರದಿತ್ತು. ಅವರೊಬ್ಬ ಅತ್ಯುತ್ತಮ ಮತ್ತು ಕುಶಾಗ್ರಮತಿ ನಾಯಕ. ಈ ನಿರ್ಧಾರ ಕೈಗೊಳ್ಳುವ ಬದಲು ಅವರು, ಅವರದೇ ಆದ ಮತ್ತು ನಮ್ಮೆಲ್ಲರ ಕನಸಾದ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಮತ್ತು ಪರಿಣಾಮಕಾರಿಯನ್ನಾಗಿಸುವ ಕಾರ್ಯಕ್ಕೆ ಕೈಜೋಡಿಸಬೇಕಾಗಿತ್ತು’ ಎಂದು ತರೂರ್ ಟ್ವೀಟ್ ಮಾಡಿದ್ದಾರೆ.
ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ನ ಎರಡೂ ಶಾಸಕಾಂಗ ಪಕ್ಷದ ಸಭೆಗೆ ಪೈಲಟ್ ಹಾಜರಾಗಿರಲಿಲ್ಲ. ಹೀಗಾಗಿ ಅವರನ್ನು ಮಂಗಳವಾರ ವಜಾಗೊಳಿಸಲಾಗಿತ್ತು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಮುಖಂಡರಾದ ಪ್ರಿಯಾಂಕಾ ಗಾಂಧಿ ವಾದ್ರಾ, ಪಿ. ಚಿದಂಬರಂ, ಕೆ.ಸಿ. ವೇಣುಗೋಪಾಲ್ ಸೇರಿ ಹಲವರು ಪೈಲಟ್ ಅವರ ಬಂಡಾಯ ಶಮನಕ್ಕೆ ಯತ್ನಿಸಿದ್ದಾರೆ. ಆದರೆ, ಅದು ಫಲ ನೀಡಿಲ್ಲ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.