ಚೆನ್ನೈ : ‘ಲೋಕಸಭೆ ಹಾಗೂ ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಸ್ತಾಪಕ್ಕೆ ಸೂಪರ್ಸ್ಟಾರ್ ರಜನಿಕಾಂತ್ ಅವರು ಬೆಂಬಲ ವ್ಯಕ್ತಪಡಿಸಿದ್ದು, ಇದರಿಂದ ಸಮಯ ಹಾಗೂ ಹಣ ಉಳಿತಾಯವಾಗಲಿದೆ’ ಎಂದು ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಏಕಕಾಲಕ್ಕೆ ಚುನಾವಣೆ ನಡೆಸುವುದು ಸ್ವಾಗತಾರ್ಹ ನಿರ್ಧಾರ. ಇದು ಜಾರಿಯಾಗಬೇಕು’ ಎಂದು ತಿಳಿಸಿದರು.
ಕಳೆದ ಡಿಸೆಂಬರ್ನಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ರಜನಿಕಾಂತ್ ಘೋಷಿಸಿದ್ದರು. ಇದೀಗ ಏಕಕಾಲಕ್ಕೆ ಚುನಾವಣೆ ನಡೆಸಲು ಬೆಂಬಲ ವ್ಯಕ್ತಪಡಿಸಿದ್ದಾರೆ.
‘ಏಕಕಾಲಕ್ಕೆ ಚುನಾವಣೆ ನಡೆಸುವುದು ಒಳ್ಳೆಯ ನಿರ್ಧಾರವಾಗಿದ್ದು, ಇದರ ಲಾಭಗಳನ್ನು ಎಲ್ಲ ರಾಜಕೀಯ ಪಕ್ಷಗಳು ಅರಿತುಕೊಂಡು, ಸಹಕಾರ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.
ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತಂತೆ ಅಭಿಪ್ರಾಯ ಸಂಗ್ರಹದ ವೇಳೆ 9 ರಾಜಕೀಯ ಪಕ್ಷಗಳು ವಿರೋಧಿಸಿದ್ದರೆ, ಬಿಜು ಜನತಾದಳ, ಎಐಎಡಿಎಂಕೆ. ಶಿರೋಮಣಿ ಅಕಾಲಿದಳ ಬೆಂಬಲಿಸಿದ್ದವು.
‘10 ಸಾವಿರ ಕೋಟಿ ವೆಚ್ಚದ ಚೆನ್ನೈ ಸಲೇಂ ನಡುವಿನ ಅಷ್ಟಪಥ ಯೋಜನೆಯನ್ನು ರಜನಿಕಾಂತ್ ಬೆಂಬಲಿಸಿದ್ದಾರೆ. ದೇಶದ ಹಿತದೃಷ್ಟಿಯಿಂದ ಇಂತಹ ಯೋಜನೆ ಜಾರಿಯಾಗುವುದು ಅಗತ್ಯ. ಇದರಿಂದ ದೊಡ್ಡ ಮಟ್ಟದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.