ಮಾಸ್ಕೊ: ಎರಡನೇ ವಿಶ್ವ ಸಮರದ ವಿಜಯೋತ್ಸವ ಸಮಾರಂಭಕ್ಕೆ ಆಹ್ವಾನಿತ ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಮೇ 9ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಬದಲಾಗಿ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾ ಆಹ್ವಾನ ನೀಡಿತ್ತು. ಆದರೆ, ಮೋದಿ ಅವರು ಭಾಗವಹಿಸುವುದಿಲ್ಲ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಖಚಿತಪಡಿಸಿದ್ದರು.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಬದಲು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಭಾಗವಹಿಸಲಿದ್ದಾರೆ ಎಂದೂ ಮಾಧ್ಯಮಗಳು ವರದಿ ಮಾಡಿದ್ದವು.
ನಾಜಿ ಜರ್ಮನಿ ವಿರುದ್ಧ ಗೆಲುವು ಸಾಧಿಸಿದ ನೆನಪು ಮತ್ತು ರಷ್ಯಾದ 80ನೇ ವಾರ್ಷಿಕೋತ್ಸವ ಸಮಾರಂಭಕ್ಕೆ ಆಯ್ದ ಆಪ್ತ ರಾಷ್ಟ್ರಗಳಿಗೆ ಆಮಂತ್ರಣ ನೀಡಿದ್ದೇವೆ ಎಂದು ಈಚೆಗೆ ರಷ್ಯಾ ವಿದೇಶಾಂಗ ಸಚಿವ ಯೂರಿ ಉಶಾಕೋವ್ ರಷ್ಯನ್ ಸರ್ಕಾರಿ ಮಾಧ್ಯಮಕ್ಕೆ ತಿಳಿಸಿದ್ದರು.
‘ಒಪ್ಪಂದದಂತೆ ಭಾರತಕ್ಕೆ ಭೇಟಿ ನೀಡುವ ಸರದಿ ನಮ್ಮದಿದೆ. ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತ ಭೇಟಿಯ ಚರ್ಚೆ ನಡೆದಿದೆ’ ಎಂದು ಅವರು ಹೇಳಿದ್ದರು.
2000ನೇ ಇಸವಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಪುಟಿನ್ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ರಚನಾತ್ಮಕ ಪಾಲುದಾರಿಕೆ ಘೋಷಣೆಗೆ ಸಹಿ ಹಾಕಿದ್ದರು.
ರಷ್ಯಾದ 80ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಸೇರಿದಂತೆ ಜಾಗತಿಕ ನಾಯಕರು ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.