ADVERTISEMENT

ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ನಾಯಕರ ಜತೆ ರಾಜನಾಥ್ ಸಿಂಗ್ ಚರ್ಚೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಜೂನ್ 2022, 14:06 IST
Last Updated 15 ಜೂನ್ 2022, 14:06 IST
ರಾಜನಾಥ್ ಸಿಂಗ್ – ಪಿಟಿಐ ಸಂಗ್ರಹ ಚಿತ್ರ
ರಾಜನಾಥ್ ಸಿಂಗ್ – ಪಿಟಿಐ ಸಂಗ್ರಹ ಚಿತ್ರ   

ನವದೆಹಲಿ:ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ರಕ್ಷಣಾ ಸಚಿವ, ಬಿಜೆಪಿ ನಾಯಕ ರಾಜನಾಥ್ ಸಿಂಗ್ ಅವರು ಪ್ರತಿಪಕ್ಷಗಳ ನಾಯಕರ ಜತೆ ಬುಧವಾರ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿಪಕ್ಷಗಳ ಸಭೆಗೂ ಮುನ್ನ ರಾಜನಾಥ್ ಸಿಂಗ್ ಅವರು ಟಿಎಂಸಿ ಅಧ್ಯಕ್ಷೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜತೆ ಮಾತುಕತೆ ನಡೆಸಿ ಅವರ ಅಭಿಪ್ರಾಯ ತಿಳಿದುಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರವಾಗಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಇಂದು (ಬುಧವಾರ) ಪ್ರತಿಪಕ್ಷಗಳ ಸಭೆ ನಡೆದಿದೆ. ಇದರ ಬೆನ್ನಲ್ಲೇ ರಾಜನಾಥ್ ಅವರು ವಿರೋಧ ಪಕ್ಷಗಳ ನಾಯಕರ ಜತೆ ಮಾತುಕತೆ ನಡೆಸಿರುವ ವಿಚಾರ ಬಹಿರಂಗವಾಗಿದೆ.

ಈ ಮಧ್ಯೆ, ‘ರಾಷ್ಟ್ರಪತಿ ಚುನಾವಣೆಗೆ ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಪ್ರತಿಪಕ್ಷಗಳು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿವೆ. ಆದರೆ, ಪವಾರ್ ಅವರು ತಮ್ಮ ಮುಂದಿರುವ ಆಯ್ಕೆಯನ್ನು ತಿರಸ್ಕರಿಸಿದರು. ನಾವೆಲ್ಲ (ಪ್ರತಿಪಕ್ಷಗಳು) ಸೇರಿ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧರಿಸಿದ್ದೇವೆ’ ಎಂದು ಪ್ರತಿಪಕ್ಷಗಳ ಸಭೆಯ ಬಳಿಕ ಮಮತಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.