ADVERTISEMENT

ಸಾಂಕ್ರಾಮಿಕ ರೋಗಗಳ ತಿದ್ದುಪಡಿ ಮಸೂದೆಗೆ ರಾಜ್ಯಸಭೆ ಅಂಗೀಕಾರ

ಪಿಟಿಐ
Published 19 ಸೆಪ್ಟೆಂಬರ್ 2020, 10:50 IST
Last Updated 19 ಸೆಪ್ಟೆಂಬರ್ 2020, 10:50 IST
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌, ರಾಜ್ಯಸಭೆಯಲ್ಲಿ ಶನಿವಾರ ಮಾತನಾಡಿದರು –ಪಿಟಿಐ ಚಿತ್ರ
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌, ರಾಜ್ಯಸಭೆಯಲ್ಲಿ ಶನಿವಾರ ಮಾತನಾಡಿದರು –ಪಿಟಿಐ ಚಿತ್ರ   

ನವದೆಹಲಿ: ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ಮಸೂದೆ–2020ಕ್ಕೆ ಶನಿವಾರ ರಾಜ್ಯಸಭೆಯ ಅನುಮೋದನೆ ಲಭಿಸಿದೆ.

ಕೋವಿಡ್‌–19 ವಿರುದ್ಧ ಹಗಲಿರುಳೆನ್ನದೆ ಹೋರಾಡುತ್ತಿರುವ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವವರನ್ನು ಗರಿಷ್ಠ ಐದು ವರ್ಷದವರೆಗೆ ಜೈಲು ಶಿಕ್ಷೆಗೆ ಗುರಿಪಡಿಸಲು ಈ ಮಸೂದೆಯಲ್ಲಿ ಅವಕಾಶವಿದೆ.

1897ರ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರವು ಈ ವರ್ಷದ ಏಪ್ರಿಲ್‌ನಲ್ಲಿ ಸುಗ್ರೀವಾಜ್ಞೆ ಹೊರಡಿಸಿತ್ತು.ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ಮಸೂದೆ–2020 ಅನ್ನು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಶನಿವಾರ ರಾಜ್ಯಸಭೆಯಲ್ಲಿ ಮಂಡಿಸಿದರು.

ADVERTISEMENT

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿಆರೋಗ್ಯ ಸೇವೆ ಒದಗಿಸುತ್ತಿರುವ ವೈದ್ಯರು, ನರ್ಸ್‌ಗಳು, ಪ್ಯಾರಾಮೆಡಿಕಲ್‌ ಕಾರ್ಯಕರ್ತರು, ಸಮುದಾಯ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವುದು ಹಾಗೂ ಅವರ ಆಸ್ತಿಪಾಸ್ತಿಗೆ ಹಾನಿ ಮಾಡುವುದನ್ನು ತಡೆಯುವುದು ಈ ಮಸೂದೆಯ ಉದ್ದೇಶವಾಗಿದೆ.

ಆರೋಗ್ಯ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಗಳ ತನಿಖೆಯ ಅಧಿಕಾರವನ್ನು ಇನ್‌ಸ್ಪೆಕ್ಟರ್‌ ದರ್ಜೆಯ ಅಧಿಕಾರಿಗೆ ನೀಡಲಾಗಿದ್ದು, ಅವರು 30 ದಿನಗಳೊಳಗೆ ಇದರ ತನಿಖೆ ನಡೆಸಬೇಕು. ಒಂದು ವರ್ಷದೊಳಗೆ ವಿಚಾರಣೆ ಮುಗಿಸಬೇಕು. ಕಾನೂನು ಉಲ್ಲಂಘಿಸಿದ್ದು ಸಾಬೀತಾದರೆ ಆರೋಪಿಗೆ ಕನಿಷ್ಠ ಮೂರು ತಿಂಗಳಿಂದ ಗರಿಷ್ಠ ಐದು ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ₹50,000 ದಿಂದ ₹ 2 ಲಕ್ಷದವರೆಗೆ ದಂಡವನ್ನೂ ವಿಧಿಸಬಹುದು ಎಂಬುದನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.