ಕೋಯಿಕ್ಕೋಡ್: ರಾಜ್ಯಸಭಾ ಸದಸ್ಯ ಎಂ.ಪಿ.ವೀರೇಂದ್ರ ಕುಮಾರ್ (84) ಗುರುವಾರ ತಡರಾತ್ರಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಪಿಟಿಐ ಸುದ್ದಿಸಂಸ್ಥೆಯ ನಿರ್ದೇಶಕರ ಮಂಡಳಿಯ ಸದಸ್ಯರೂ ಮೂರು ಬಾರಿ ಅಧ್ಯಕ್ಷರೂ ಆಗಿದ್ದ ವೀರೇಂದ್ರ ಕುಮಾರ್, ಕೇರಳದ ಮಾತೃಭೂಮಿ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಕೇಂದ್ರ ಸರ್ಕಾರದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.
ಅನಾರೋಗ್ಯ ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟರು. ವಯನಾಡ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ಅವರು ಪತ್ನಿ, ಮೂವರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ.
ಇದನ್ನೂ ಓದಿ:ಸಮುದಾಯದ ಸನಿಹಕ್ಕೆ ಕೋವಿಡ್
1987ರಲ್ಲಿ ಕೇರಳ ವಿಧಾನಸಭೆಗೆ ಆಯ್ಕೆಯಾಗಿದ್ದ ವೀರೇಂದ್ರ ಕುಮಾರ್ ಎರಡು ಬಾರಿ ಲೋಕಸಭೆಗೂ ಆಯ್ಕೆಯಾಗಿದ್ದರು. 2018ರಲ್ಲಿ ಕೇರಳದಿಂದ ಎಡಪಕ್ಷ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ವೀರೇಂದ್ರ ಕುಮಾರ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ವೀರೇಂದ್ರ ಕುಮಾರ್ ನಿಧನಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.