ಲಖನೌ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದ ಗರ್ಭಗುಡಿಯಲ್ಲಿಜನವರಿ 24, 2024ರಂದು ರಾಮಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲು ದಿನಾಂಕ ನಿಗದಿಪಡಿಸಲಾಗದೆ.
ಈ ಬಗ್ಗೆ ಮಾಹಿತಿ ನೀಡಿರುವ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ‘ನೂತನ ಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗೆ ಜೂನ್ 24, 2024 ಅತ್ಯಂತ ಶುಭ ದಿನ ಎಂದು ಪರಿಗಣಿಸಲಾಗಿದೆ. ಡಿಸೆಂಬರ್ 2023ರಲ್ಲಿ ಗರ್ಭಗುಡಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಅದೇ ತಿಂಗಳಿನಿಂದ ಭಕ್ತರಿಗೆ ದೇಗುಲ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ’ ಎಂದು ತಿಳಿಸಿದ್ದಾರೆ.
ಇದೇ ವೇಳೆ, ‘ಗರ್ಭಗುಡಿಯ ನಿರ್ಮಾಣ ಕಾರ್ಯ ಇದೇ ಜೂನ್ 1ರಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ 5 ದಿನಗಳ ಕಾಲ ನಡೆಯಲಿರುವ ವಿಶೇಷ ಪೂಜೆ ಈಗಾಗಲೇ ಆರಂಭವಾಗಿದೆ’ ಎಂದು ತಿಳಿಸಿದ್ದಾರೆ.
ಜೂ.1ರಂದು ನಡೆಯಲಿರುವ ಪೂಜಾ ಕಾರ್ಯಕ್ರಮದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾಗಿಯಾಗುವ ಸಾಧ್ಯತೆ ಇದೆ.
ಈ ಮಧ್ಯೆ, 2024ರ ಲೋಕಸಭಾ ಚುನಾವಣೆಗೂ ಮೊದಲೇ ರಾಮ ಮಂದಿರ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಬಿಜೆಪಿ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಬಯಸಿವೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 2020ರಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.