ಲಖನೌ:ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದು ಈ ಸಮಾರಂಭಕ್ಕೆ ದಲಿತ ಮಹಾಮಂಡಲೇಶ್ವರ ಸ್ವಾಮಿ ಕನ್ಹಯ್ಯ ಪ್ರಭುನಂದನ ಗಿರಿ ಅವರಿಗೆ ಆಹ್ವಾನ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್ಪಿ ನಾಯಕಿ ಮಾಯಾವತಿ ಅವರು ಭೂಮಿ ಪೂಜೆ ಕಾರ್ಯಕ್ರಮಕ್ಕೆ ಪ್ರಭುನಂದನ ಗಿರಿ ಸ್ವಾಮೀಜಿಗೂ ಆಹ್ವಾನ ನೀಡಬೇಕಿತ್ತು ಎಂದು ಟ್ವೀಟ್ ಮಾಡಿದ್ದಾರೆ.
ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂಬ ಬಗ್ಗೆ ಗಿರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಪ್ರಭುನಂದನ ಗಿರಿಅವರಿಗೆ ಆಹ್ವಾನ ನೀಡದಿರುವ ಬಗ್ಗೆಅವರು ಬೇಸರ ವ್ಯಕ್ತಪಡಿಸಿರುವ ವಿಷಯ ನನ್ನ ಗಮನಕ್ಕೆ ಬಂದಿದೆ. ಎಲ್ಲಾ ಸಮುದಾಯಗಳ 200ಕ್ಕೂ ಹೆಚ್ಚು ಸಂತರಿಗೆ ಆಹ್ವಾನ ನೀಡಿದ್ದರೆ, ಸಂವಿಧಾನದ ಆಶಯಗಳಿಗೆ ಹಾಗೂ ಜಾತಿರಹಿತ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದಂತಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.
ನಮ್ಮ ದಲಿತ ಸಮುದಾಯ ಇಂತಹ ವಿಷಯಗಳನ್ನು ನಿರ್ಲಕ್ಷಿಸಿ, ದಡಿಮೆ, ಕಾಯಕದ ಕಡೆ ಗಮನಹರಿಸಿ ಅಂಬೇಡ್ಕರ್ ಅವರ ದಾರಿಯಲ್ಲಿ ಸಾಗಬೇಕು ಎಂದು ಅವರು ಹೇಳಿದ್ದಾರೆ.
ಸುದೀರ್ಘ ಕಾನೂನು ಹೋರಾಟ ಬಳಿಕ ಕಳೆದ ವರ್ಷ ನವೆಂಬರ್ 9ರಂದು ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.