ಅಯೋಧ್ಯೆ: ಆಶ್ಚರ್ಯಕರ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಮಂಗಳವಾರ ರಾಹುಲ್ ಗಾಂಧಿ ಅವರಿಗೆ ಪತ್ರವೊಂದನ್ನು ರವಾನಿಸಿದ್ದು, ತಮ್ಮ ಆಶೀರ್ವಾದ ಸದಾ ನಿಮ್ಮೊಂದಿಗಿರಲಿದೆ ಎಂದು ಹರಸಿದ್ದಾರೆ.
ರಾಹುಲ್ ಗಾಂಧಿ ಅವರು ಸದ್ಯ ಭಾರತ ಜೋಡೊ ಯಾತ್ರೆಯಲ್ಲಿದ್ದಾರೆ. ಯಾತ್ರೆಯು ಇಂದು ಉತ್ತರ ಪ್ರದೇಶ ತಲುಪಲಿದೆ.
‘ನೀವು ದೇಶಕ್ಕಾಗಿ ಮಾಡುವ ಯಾವುದೇ ಕೆಲಸ ಎಲ್ಲರಿಗೂ ಪ್ರಯೋಜನಕಾರಿ. ನನ್ನ ಆಶೀರ್ವಾದ ನಿಮ್ಮ ಮೇಲೆ ಸದಾ ಇರಲಿದೆ’ ಎಂದು ದಾಸ್ ಅವರು ಪತ್ರದಲ್ಲಿ ಬರೆದಿದ್ದಾರೆ. ಅದನ್ನು ಅವರು ಯುವ ಕಾಂಗ್ರೆಸ್ ಮುಖಂಡ ಗೌರವ್ ತಿವಾರಿ ಮೂಲಕ ಹಸ್ತಾಂತರ ಮಾಡಿದ್ದಾರೆ.
'ರಾಮನ ಆಶೀರ್ವಾದ ನಿಮ್ಮೊಂದಿಗೆ (ರಾಹುಲ್ ಗಾಂಧಿ) ಇರಲಿ‘ ಎಂದೂ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಯೋಧ್ಯೆಯ ಹನುಮಾನ್ ಗರ್ಹಿ ದೇಗುಲದ ಅರ್ಚಕ ರಾಜು ದಾಸ್, ’ಇದು ಸತ್ಯೇಂದ್ರ ದಾಸ್ ಅವರ ವೈಯಕ್ತಿಕ ಅಭಿಪ್ರಾಯ. ಅವರ ಮಾತನ್ನು ನಾವು ಒಪ್ಪುವುದಿಲ್ಲ. ಕಾಂಗ್ರೆಸ್ ಯಾವಾಗಲೂ ಹಿಂದೂ ವಿರೋಧಿ’ ಎಂದು ಹೇಳಿದ್ದಾರೆ.
ವಿರಾಮದ ಬಳಿಕ ಇಂದು ಭಾರತ್ ಜೋಡೊ ಯಾತ್ರೆಗೆ ಮರುಚಾಲನೆ
9 ದಿನಗಳ ವಿರಾಮದ ಬಳಿಕ ಭಾರತ್ ಜೋಡೊ ಯಾತ್ರೆಯು ಜ. 3ರಂದು (ಮಂಗಳವಾರ) ಪುನರಾರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಉತ್ತರಪ್ರದೇಶವನ್ನು ತಲುಪಲಿದೆ.
ಉತ್ತರಪ್ರದೇಶದಲ್ಲಿ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಬಿಎಸ್ಪಿಯ ಮಾಯಾವತಿ ಹಾಗೂ ಆರ್ಎಲ್ಡಿಯ ಜಯಂತ್ ಸಿಂಗ್ ಅವರು ಭಾಗವಹಿಸುವುದಿಲ್ಲ ಎಂದು ಹೇಳಿದ್ದರೆ, ನಿತೀಶ್ ಕುಮಾರ್ ಅವರು ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ.
ಕನ್ಯಾಕುಮಾರಿಯಿಂದ ಆರಂಭವಾಗಿರುವ ಯಾತ್ರೆಯು 108 ದಿನಗಳಲ್ಲಿ ಇದುವರೆಗೆ ಒಟ್ಟು 3,122 ಕಿ.ಮೀ. ಸಂಚರಿಸಿದೆ. ಯಾತ್ರೆಯು ಜನವರಿ 30ರಂದು ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಮುಕ್ತಾಯಗೊಳ್ಳಲಿದೆ. ಯಾತ್ರೆಯ 150ನೇ ದಿನ ಹಾಗೂ ಮಹಾತ್ಮ ಗಾಂಧಿ ಅವರು ಹುತಾತ್ಮರಾದ ದಿನದಂದು ಶ್ರೀನಗರದಲ್ಲಿ ರಾಹುಲ್ ಗಾಂಧಿ ಅವರು ತ್ರಿವರ್ಣ ಧ್ವಜವನ್ನು ಹಾರಿಸಲಿದ್ದಾರೆ.
ಇದನ್ನೂ ಓದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.