ADVERTISEMENT

ದೆಹಲಿ ಸ್ಫೋಟ: ದೇಶದೆಲ್ಲೆಡೆ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 19:58 IST
Last Updated 10 ನವೆಂಬರ್ 2025, 19:58 IST
<div class="paragraphs"><p>ಸ್ಫೋಟ ಸಂಭವಿಸಿದ ಸ್ಥಳದಲ್ಲಿ ರಸ್ತೆ ಬದಿ ಬಿದ್ದಿದ್ದ ಶೂಗಳು</p></div>

ಸ್ಫೋಟ ಸಂಭವಿಸಿದ ಸ್ಥಳದಲ್ಲಿ ರಸ್ತೆ ಬದಿ ಬಿದ್ದಿದ್ದ ಶೂಗಳು

   

ಕೃ‍ಪೆ: ಪಿಟಿಐ

ನವದೆಹಲಿ: ಇಲ್ಲಿನ ಕೆಂಪುಕೋಟೆ ಮೆಟ್ರೊ ನಿಲ್ದಾಣದ ಸಮೀಪ ಸೋಮವಾರ ಸಂಜೆ ಸಂಭವಿಸಿದ ಕಾರು ಸ್ಫೋಟದ ಬಳಿಕ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ADVERTISEMENT

ಪ್ರಮುಖ ಮಹಾನಗರಗಳು, ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಬಸ್‌ ನಿಲ್ದಾಣ, ರೈಲು ನಿಲ್ದಾಣ, ಮೆಟ್ರೊ ನಿಲ್ದಾಣ, ಶಾಪಿಂಗ್‌ ಮಾಲ್‌ ಹಾಗೂ ಜನಸಂದಣಿ ಇರುವಂತಹ ಸ್ಥಳಗಳಲ್ಲಿ ಪೊಲೀಸ್‌ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಗರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗಳಿಗೆ ಆಯಾ ರಾಜ್ಯ ಸರ್ಕಾರಗಳು ಸಹ ಸೂಚಿಸಿವೆ.

ಕರ್ನಾಟಕ, ಮಹಾರಾಷ್ಟ್ರ, ರಾಜಸ್ಥಾನ, ಉತ್ತರ ಪ್ರದೇಶ, ಪಂಜಾಬ್‌ ಸೇರಿದಂತೆ ಎಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಪರಿಸ್ಥಿತಿ ಅವಲೋಕಿಸಿದ ಮೋದಿ

ಕಾರು ಸ್ಫೋಟ ಪ್ರಕರಣದ ಪರಿಸ್ಥಿತಿಯನ್ನು ಅವಲೋಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಮಾತನಾಡಿ ಮತ್ತಷ್ಟು ಮಾಹಿತಿ ಪಡೆದರು.

ಅಧಿಕಾರಿಗಳೊಂದಿಗೆ ಶಾ ಚರ್ಚೆ: ದೆಹಲಿ ಪೊಲೀಸ್‌ ಕಮಿಷನರ್‌, ಗುಪ್ತಚರ ಬ್ಯೂರೊ ನಿರ್ದೇಶಕರು ಹಾಗೂ ಕೇಂದ್ರ ಗೃಹ ಕಾರ್ಯದರ್ಶಿಯೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತುಕತೆ ನಡೆಸುವ ಮೂಲಕ ಕಾರು ಸ್ಫೋಟದ ಬಗ್ಗೆ ಅವಲೋಕಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಶಾ

ನವದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಘಟನೆ ನಡೆದ ಕೆಲ ಗಂಟೆಗಳ ಬಳಿಕ, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವೈದ್ಯರೊಂದಿಗೆ ಭೇಟಿ ನೀಡಿದ ಸಚಿವರು, ಕೆಲ ವಾರ್ಡ್‌ಗಳಿಗೆ ತೆರಳಿ ಗಾಯಾಳುಗಳೊಂದಿಗೆ ಚರ್ಚಿಸಿದರು.

ತ್ವರಿತ ತನಿಖೆ ನಡೆಸಲು ಕಾಂಗ್ರೆಸ್‌ ಆಗ್ರಹ

‘ಕಾರು ಸ್ಫೋಟವು ದುಃಖಕರ ಸಂಗತಿ. ಪ್ರಕರಣದ ಸಮಗ್ರ ಹಾಗೂ ತ್ವರಿತಗತಿಯಲ್ಲಿ ತನಿಖೆ ನಡೆಸಬೇಕು’ ಎಂದು ಕಾಂಗ್ರೆಸ್‌ ಪಕ್ಷ ಒತ್ತಾಯಿಸಿದೆ.

‘ದೆಹಲಿ ಸರ್ಕಾರದ ಭದ್ರತಾ ವೈಫಲ್ಯವನ್ನು ಈ ಘಟನೆಯು ಎತ್ತಿ ತೋರಿಸುತ್ತದೆ. ಗೃಹ ಸಚಿವಾಲಯ ಹೇಳಿಕೊಳ್ಳುವಂತೆ ದೆಹಲಿಯು ಸುರಕ್ಷಿತ ರಾಜಧಾನಿ ಆಗಿದೆಯೇ’ ಎಂದು ಪ್ರಶ್ನಿಸಿದೆ.

‘ಇಂತಹ ಸಂಕಷ್ಟದ ಸಮಯದಲ್ಲಿ ಇಡೀ ದೇಶ ಒಗ್ಗಟ್ಟಾಗಿ ನಿಲ್ಲಬೇಕು’ ಎಂದು ಹೇಳಿದೆ. 

‘ನಾವು ದುಃಖಿತ ಕುಟುಂಬಗಳೊಂದಿಗೆ ನಿಲ್ಲುತ್ತೇವೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇವೆ’ ಎಂದು ಕಾಂಗ್ರೆಸ್‌ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್‌ ಖೇರಾ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.