ರಾಹುಲ್ ಗಾಂಧಿ
ನವದೆಹಲಿ: ‘ಭಾರತ್ ಜೋಡೊ ಯಾತ್ರೆ’ಯ ಸಂದರ್ಭದಲ್ಲಿ ಸೇನೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ 2026ರ ಏಪ್ರಿಲ್ 22ರವರೆಗೆ ವಿಸ್ತರಿಸಿದೆ.
ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು ರಾಹುಲ್ ಸಲ್ಲಿಸಿದ್ದ ಮೇಲ್ಮನವಿಯನ್ನು ಅಂಗೀಕರಿಸಿದ್ದು, ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ವಿಸ್ತರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ಸಮನ್ಸ್ ನೀಡಿದ್ದನ್ನು ಪ್ರಶ್ನಿಸಿ ರಾಹುಲ್ ಅವರು ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಮೇಲ್ಮನವಿಯನ್ನು ಹೈಕೋರ್ಟ್ ಮೇ 29ರಂದು ವಜಾ ಮಾಡಿತ್ತು. ಇದರ ವಿರುದ್ಧ ರಾಹುಲ್, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ನವೆಂಬರ್ 20ರಂದು ರಾಹುಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮುಂದಿನ ಆದೇಶದವರೆಗೆ ಕೆಳ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಿತ್ತು.
2022ರ ಏಪ್ರಿಲ್ನಲ್ಲಿ ನಡೆದ ‘ಭಾರತ್ ಜೋಡೊ ಯಾತ್ರೆ’ಯ ವೇಳೆ ಮಾತನಾಡಿದ್ದ ರಾಹುಲ್ ಗಾಂಧಿ, ‘ಭಾರತಕ್ಕೆ ಸೇರಿದ 2,000 ಚ.ಕಿ.ಮೀ ಭೂಮಿಯನ್ನು ಚೀನಾ ಆಕ್ರಮಿಸಿಕೊಂಡಿದೆ’ ಎಂದು ಹೇಳಿಕೆ ನೀಡಿದ್ದರು. ಹಾಗೆಯೇ 2020ರಲ್ಲಿ ಭಾರತ ಹಾಗೂ ಚೀನಾ ಸೈನಿಕರ ನಡುವೆ ನಡೆದ ಗಾಲ್ವಾನ್ ವ್ಯಾಲಿ ಸಂಘರ್ಷದ ಸಂದರ್ಭದಲ್ಲಿ ಚೀನಾದಿಂದ ಅತಿಕ್ರಮಣ ನಡೆದಿದೆ ಎಂದೂ ಅವರು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.