ನವದೆಹಲಿ: ಅಲೋಪಥಿ ಚಿಕಿತ್ಸೆ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳ ವಿಚಾರಣೆಯನ್ನು ತಡೆಹಿಡಿಯುವಂತೆ ಕೋರಿ ಬಾಬಾ ರಾಮದೇವ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜು.12ರಂದು ನಡೆಸುವುದಾಗಿ ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ.
‘ಕೋವಿಡ್ ಸಂದರ್ಭದಲ್ಲಿ ಅಲೋಪಥಿ ಔಷಧ ಬಳಕೆಗೆ ಸಂಬಂಧಿಸಿದಂತೆ ಬಾಬಾ ರಾಮದೇವ್ ನೀಡಿರುವ ಹೇಳಿಕೆಯ ಮೂಲ ದಾಖಲೆಗಳು ಭಾನುವಾರ ರಾತ್ರಿ 11 ಗಂಟೆಗೆ ಸಿಕ್ಕಿವೆ. ಹಾಗಾಗಿ ಅರ್ಜಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್ ಬೊಪಣ್ಣ ಮತ್ತು ಹೃಷಿಕೇಶ ರಾಯ್ ಅವರನ್ನೊಳಗೊಂಡ ಪೀಠವು ಹೇಳಿದೆ.
ಕೋವಿಡ್ ಸಂದರ್ಭದಲ್ಲಿ ಅಲೋಪಥಿ ಔಷಧ ಬಳಕೆಗೆ ಸಂಬಂಧಿಸಿದಂತೆ ರಾಮದೇವ್ ಅವರು ನೀಡಿರುವ ಹೇಳಿಕೆಯ ಮೂಲ ದಾಖಲೆಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಭಾರತೀಯ ವೈದ್ಯಕೀಯ ಸಂಘವು(ಐಎಂಎ) ರಾಮದೇವ್ ಅವರ ಹೇಳಿಕೆಯನ್ನು ಖಂಡಿಸಿ ಬಿಹಾರ ಮತ್ತು ಛತ್ತೀಸಗಡದ ವಿವಿಧ ಠಾಣೆಗಳಿಗೆ ದೂರು ನೀಡಿತ್ತು. ಈ ಕುರಿತ ತನಿಖೆಗೆ ತಡೆ ನೀಡಬೇಕೆಂದು ಕೋರಿ ರಾಮ್ದೇವ್ ಅವರು ಮನವಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.