ADVERTISEMENT

ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರ; 38 ಪ್ರಕರಣ ದಾಖಲು, 84 ಮಂದಿಯ ಬಂಧನ

ಪಿಟಿಐ
Published 30 ಜನವರಿ 2021, 15:14 IST
Last Updated 30 ಜನವರಿ 2021, 15:14 IST
ಕೆಂಪುಕೋಟೆಯಲ್ಲಿ ಪ್ರತಿಭಟನೆ (ಸಂಗ್ರಹ ಚಿತ್ರ)
ಕೆಂಪುಕೋಟೆಯಲ್ಲಿ ಪ್ರತಿಭಟನೆ (ಸಂಗ್ರಹ ಚಿತ್ರ)   

ನವದೆಹಲಿ: ಗಣರಾಜ್ಯೋತ್ಸವದ ದಿನದಂದು ರೈತರು ನಡೆಸಿದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 38 ಪ್ರಕರಣಗಳನ್ನು ದಾಖಲಿಸಿದ್ದು, 84 ಮಂದಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳ ಮುಂದಾಳತ್ವದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿ ಗಡಿ ಪ್ರದೇಶಗಳಲ್ಲಿ ಕಳೆದೆರಡು ತಿಂಗಳಿಗಿಂತ ಹೆಚ್ಚು ಸಮಯದಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

ಪ್ರತಿಭಟನೆಯನ್ನು ತೀವ್ರಗೊಳಿಸಿ ಕೇಂದ್ರ ಸರ್ಕಾರದ ಮೇಲೆ ಮತ್ತಷ್ಟು ಒತ್ತಡ ತರುವ ಉದ್ದೇಶದೊಂದಿಗೆ ಜನವರಿ 26 ಗಣರಾಜ್ಯೋತ್ಸವದ ದಿನದಂದು ಟ್ರ್ಯಾಕ್ಟರ್ ಪೆರೇಡ್ ಘೋಷಿಸಲಾಗಿತ್ತು.

ADVERTISEMENT

ಆದರೆ ಪೊಲೀಸರು ನಿಗದಿಪಡಿಸಿದ ಮಾರ್ಗವನ್ನು ಉಲ್ಲಂಘಿಸಿದ್ದ ಪ್ರತಿಭಟನಾಕಾರರ ಗುಂಪು, ಕೆಂಪು ಕೋಟೆಗೆ ನುಗ್ಗಿ ಧಾರ್ಮಿಕ ಹಾಗೂ ರೈತ ಸಂಘಟನೆಗಳ ಧ್ವಜವನ್ನು ಹಾರಿಸಿದ್ದರು.

ಸಾವಿರಾರು ಪ್ರತಿಭಟನಕಾರರು ಪೊಲೀಸರೊಂದಿಗೆ ಘರ್ಷಣೆಗಿಳಿದರು. ಟ್ರ್ಯಾಕ್ಟರ್‌ಗಳನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಭಯದ ವಾತಾವರಣ ಸೃಷ್ಟಿಸಿದರು. ಸಾರ್ವಜನಿಕ ಆಸ್ತಿ-ಪಾಸ್ತಿಗೂ ಹಾನಿಯುಂಟು ಮಾಡಿದ್ದರು.

ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು, ಹಲವಾರು ರೈತ ಮುಖಂಡರಿಗೆ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ. ಅಲ್ಲದೆ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ದೆಹಲಿ ಪೊಲೀಸರ ಪ್ರಕಾರ ಹಿಂಸಾಚಾರದಲ್ಲಿ ಸುಮಾರು 400ರಷ್ಟು ಪೊಲೀಸರು ಗಾಯಗೊಂಡಿದ್ದರು. ಈ ನಡುವೆ ಟ್ರ್ಯಾಕ್ಟರ್ ಮಗುಚಿ ಪ್ರತಿಭಟನಾಕಾರರೊಬ್ಬರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.