ನವದೆಹಲಿ: ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವ ಪರಿಶಿಷ್ಟರಿಗೂ, ಮೀಸಲಾತಿ ಸೌಲಭ್ಯವನ್ನು ನೀಡಬೇಕು ಎಂಬ ಬೇಡಿಕೆ ಕುರಿತಂತೆ ಮೂರು ವಾರಗಳಲ್ಲಿ ನಿಲುವು ಸ್ಪಷ್ಟಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಈ ಕುರಿತು ಸಲ್ಲಿಸಲಾಗಿರುವ ಸಾರ್ವಜನಿಕರ ಹಿತಾಸಕ್ತಿ ಅರ್ಜಿಯಲ್ಲಿ, ಮತಾಂತರಗೊಂಡಿರುವ ದಲಿತರಿಗೂ ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮ ಪಾಲಿಸುತ್ತಿರುವ ದಲಿತರಿಗೂ ನೀಡಬೇಕು ಎಂದು ಕೋರಲಾಗಿದೆ. ಇನ್ನೊಂದು ಅರ್ಜಿಯಲ್ಲಿ ಮೂಲತಃ ಪರಿಶಿಷ್ಟರಾಗಿದ್ದ ಕ್ರೈಸ್ತರಿಗೂ ಮೀಸಲಾತಿ ಸೌಲಭ್ಯಗಳನ್ನು ವಿಸ್ತರಿಸಬೇಕು ಎಂದು ಮನವಿ ಮಾಡಲಾಗಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಈ ಕುರಿತಂತೆ ಸರ್ಕಾರದ ನಿಲುವನ್ನು ತಿಳಿಸಲಾಗುವುದು ಎಂದು ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರಿದ್ದ ಪೀಠಕ್ಕೆ ತಿಳಿಸಿದರು.
ನ್ಯಾಯಮೂರ್ತಿಗಳಾದ ಎ.ಎಸ್.ಓಕಾ, ವಿಕ್ರಂ ನಾಥ್ ಅವರೂ ಪೀಠದಲ್ಲಿದ್ದಾರೆ.
ಅರ್ಜಿದಾರರ ಪರ ವಕೀಲರು ವಾರದಲ್ಲಿ ಪ್ರತಿಕ್ರಿಯೆ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ. ಮೂರು ಪುಟಗಳಿಗೆ ಮೀರದಂತೆ ಮುಂದಿನ ವಿಚಾರಣೆ ದಿನದ ಮೂರು ದಿನ ಮೊದಲು ಪ್ರತಿಕ್ರಿಯೆ ದಾಖಲಿಸಬೇಕು ಎಂದು ನ್ಯಾಯಮೂರ್ತಿ
ತಿಳಿಸಿದರು.
ಮುಂದಿನ ವಿಚಾರಣೆಯನ್ನು ಅಕ್ಟೋಬರ್ 11ಕ್ಕೆ ಮುಂದೂಡಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದ ಕಾನೂನು ತೊಡಕುಗಳನ್ನು ಬಗೆಹರಿಸಬೇಕು ಎಂದು ಪೀಠವು ಅಭಿಪ್ರಾಯಪಟ್ಟಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.