ಮೇದಿನಿನಗರ: 13 ವರ್ಷಗಳ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ನ ಪಲಮು ಜಿಲ್ಲೆಯ ನ್ಯಾಯಾಲಯ ಬುಧವಾರ ₹6,000 ದಂಡ ವಿಧಿಸಿದೆ.
2009ರ ಜಾರ್ಖಂಡ್ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಲಾಲು ಅವರು ನೀತಿ ಸಂಹಿತೆ ಉಲ್ಲಂಘಿಸಿದ್ದರು.
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಲಾಲು ಅವರಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸುತ್ತಿರುವುದಾಗಿ ನ್ಯಾಯಾಧೀಶ ಸತೀಶ್ ಕುಮಾರ್ ಮುಂಡಾ ತೀರ್ಪು ಪ್ರಕಟಿಸಿದರು.
2009ರಲ್ಲಿ ಚುನಾವಣಾ ಪ್ರಚಾರದ ವೇಳೆ ಲಾಲು ಪ್ರಸಾದ್ ಯಾದವ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಮೇದಿನಿನಗರ ಹೆಲಿಪ್ಯಾಡ್ನಲ್ಲಿ ಇಳಿಯುವ ಬದಲು ಪೈಲಟ್ನ ಅಚಾತುರ್ಯದಿಂದ ಜಾರ್ಖಂಡ್ನ ಗಢವಾದಲ್ಲಿ ಭತ್ತದ ಗದ್ದೆಯಲ್ಲಿ ಇಳಿದಿತ್ತು.
ಭಾರತೀಯ ದಂಡಸಂಹಿತೆಯ ಸೆಕ್ಷನ್ 188 (ಅಧಿಕಾರಿಗಳ ಆದೇಶಕ್ಕೆ ಅವಿಧೇಯತೆ ತೋರುವುದು), 279 (ಸಾರ್ವಜನಿಕ ಪ್ರದೇಶದಲ್ಲಿ ಅಜಾಗರೂಕತೆಯ ಚಾಲನೆ), 290 (ಸಾರ್ವಜನಿಕ ತೊಂದರೆಗಾಗಿ ಶಿಕ್ಷೆ), 291 (ಸಾರ್ವಜನಿಕ ತೊಂದರೆ ಮುಂದುವರಿಸುವುದು), 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವರು ಎಸಗುವ ಕೃತ್ಯ) ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆಯ ಸೆಕ್ಷನ್ 127 ರ (ಚುನಾವಣಾ ಸಭೆಗಳಲ್ಲಿ ಗೊಂದಲ ಸೃಷ್ಟಿಸುವುದಕ್ಕೆ ಸಂಬಂಧಿಸಿದ ಸೆಕ್ಷನ್) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಬಳಿಕ ರಾಂಚಿಯಿಂದ ಮೇದಿನಿನಗರಕ್ಕೆ ವರ್ಗಾಯಿಸಲಾಗಿತ್ತು ಎಂದು ಲಾಲು ಪರ ವಕೀಲರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.