ಚಂಡೀಗಡ: ಪಂಜಾಬ್ ಗುಪ್ತಚರ ದಳದ ಪ್ರಧಾನ ಕಚೇರಿ ಮೇಲೆ ಸೋಮವಾರ ರಾತ್ರಿ ಗ್ರೆನೇಡ್ ದಾಳಿ ನಡೆದಿದೆ. ಸ್ಫೋಟದಲ್ಲಿ ಕಟ್ಟಡಕ್ಕೆ ಭಾಗಶಃ ಹಾನಿಯಾಗಿದೆ. ಯಾರಿಗೂ ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮೊಹಾಲಿಯ ಸೆಕ್ಟರ್ 77ರಲ್ಲಿರುವ ಕಚೇರಿಯಲ್ಲಿ ರಾತ್ರಿ 7.45ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ರಾಜಕೀಯ ಪಕ್ಷಗಳು ಘಟನೆಗೆ ಆಘಾತ ವ್ಯಕ್ತಪಡಿಸಿವೆ.
ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ತನಿಖೆ ನಡೆಸಲಾಗುತ್ತಿದೆ. ವಿಧಿವಿಜ್ಞಾನ ತಂಡಗಳನ್ನು ಕರೆಸಲಾಗಿದೆ. ಎಫ್ಐಆರ್ ದಾಖಲಿಸಲಾಗಿದೆ ಎಂದು ಮೊಹಾಲಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಘಟನಾ ಸ್ಥಳವನ್ನು ಪೊಲೀಸರು ಸುತ್ತುವರಿದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಾಳಿ ಹಿಂದೆ ಭಯೋತ್ಪಾದಕರ ಕೈವಾಡ ಇದೆಯೇ ಎಂಬ ಪ್ರಶ್ನೆಗೆ ಅವರು, ‘ತನಿಖೆ ನಡೆಯುತ್ತಿದೆ. ಚಂಡೀಗಡ ಪೊಲೀಸ್ ಕ್ಷಿಪ್ರ ಕಾರ್ಯಪಡೆಯನ್ನೂ ನಿಯೋಜಿಸಲಾಗಿದೆ. ಪಂಜಾಬ್ನ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ತಪ್ಪಿತಸ್ಥರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ’ ಎಂದು ಉತ್ತರಿಸಿದ್ದಾರೆ.
ಚಂಡೀಗಡದ ಬುರೈಲ್ ಜೈಲಿನಲ್ಲಿ ಏಪ್ರಿಲ್ 24ರಂದು ಸ್ಫೋಟಕ ಪತ್ತೆಯಾಗಿತ್ತು.
ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಘಟನೆಯನ್ನು ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಭಗವಂತ ಮಾನ್ ಅವರನ್ನು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.