ADVERTISEMENT

ಭಾರತಕ್ಕೆ ಏನು ಬೇಕೆಂಬುದನ್ನು ನಿರ್ಧರಿಸಲು ನಮಗೆ ಗೊತ್ತಿದೆ: ಸಚಿನ್ ತೆಂಡೂಲ್ಕರ್

ವಿದೇಶಿ ಗಣ್ಯರಿಗೆ ತಿರುಗೇಟು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಫೆಬ್ರುವರಿ 2021, 15:52 IST
Last Updated 3 ಫೆಬ್ರುವರಿ 2021, 15:52 IST
ಸಚಿನ್ ತೆಂಡೂಲ್ಕರ್ (ರಾಯಿಟರ್ಸ್ ಸಂಗ್ರಹ ಚಿತ್ರ)
ಸಚಿನ್ ತೆಂಡೂಲ್ಕರ್ (ರಾಯಿಟರ್ಸ್ ಸಂಗ್ರಹ ಚಿತ್ರ)   

ಮುಂಬೈ: ದೇಶದ ಸಾರ್ವಭೌಮತ್ವದ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲಾಗುವುದಿಲ್ಲ ಎಂದು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.

ಹೊಸ ಕೃಷಿ ಕಾಯ್ದೆಗಳ ಮತ್ತು ರೈತರ ಪ್ರತಿಭಟನೆಗೆ ಸಂಬಂಧಿಸಿ ವಿದೇಶಿ ಗಣ್ಯರು ಹೇಳಿಕೆಗಳನ್ನು ನೀಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಅವರು ಟ್ವೀಟ್ ಮಾಡಿದ್ದಾರೆ.

‘ಭಾರತದ ಸಾರ್ವಭೌಮತ್ವದ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲಾಗದು. ವಿದೇಶಿ ಶಕ್ತಿಗಳು ಪ್ರೇಕ್ಷಕರಾಗಬಹುದೇ ವಿನಹ ದೇಶದ ಒಳಗಿನ ವಿಚಾರದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. ಭಾರತ ಏನು ಎಂಬುದು ಮತ್ತು ಭಾರತಕ್ಕೆ ಏನು ಬೇಕು ಎಂಬುದನ್ನು ನಿರ್ಧರಿಸಲು ಭಾರತೀಯರಿಗೆ ಗೊತ್ತಿದೆ. ಒಂದು ದೇಶವಾಗಿ ನಾವು ಒಗ್ಗಟ್ಟಿನಿಂದಿರೋಣ’ ಎಂದು ಸಚಿನ್ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ರೈತರ ಪ್ರತಿಭಟನೆಗೆ ಸಂಬಂಧಿಸಿ ಅಮೆರಿಕದ ಪಾಪ್ ಗಾಯಕಿ ರಿಹಾನ್ನಾ, ಸ್ವೀಡನ್‌ನ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದ ಕೆಲವು ಸೆಲೆಬ್ರಿಟಿಗಳು ಟ್ವೀಟ್ ಮಾಡಿದ್ದರು. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ, ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೊಸೆ ಹಾಗೂ ಲೇಖಕಿ ಮೀನಾ ಹ್ಯಾರಿಸ್ ಸಹ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ವಿದೇಶಾಂಗ ಸಚಿವಾಲಯ, ರೈತರ ಪ್ರತಿಭಟನೆಗೆ ಸಂಬಂಧಿಸಿ ಹೇಳಿಕೆಗಳನ್ನು ನೀಡುವ ಮುನ್ನ ವಾಸ್ತವ ಏನೆಂಬುದನ್ನು ತಿಳಿಯಿರಿ ಎಂದು ವಿದೇಶಿ ಗಣ್ಯರಿಗೆ ಸೂಚಿಸಿತ್ತು.

ವಿದೇಶಿ ಹಸ್ತಕ್ಷೇಪದ ವಿಚಾರದಲ್ಲಿ ಅನೇಕ ಸೆಲೆಬ್ರಿಟಿಗಳು ಕೇಂದ್ರ ಸರ್ಕಾರವನ್ನು ಬೆಂಬಲಿಸಿದ್ದು, #IndiaTogether ಮತ್ತು #IndiaAgainstPropaganda ಹ್ಯಾಷ್‌ಟ್ಯಾಗ್‌ಗಳ ಮೂಲಕ ಟ್ವೀಟ್‌ಗಳನ್ನು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.