ನವದೆಹಲಿ: ಪ್ರಮಾಣವಚನವನ್ನು ಉಲ್ಲಂಘಿಸಿ, ಸಂವಿಧಾನದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಜಮ್ಮು–ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿಥಾಲ್ ಅವರನ್ನು ವಜಾಗೊಳಿಸಬೇಕೆಂದು ಸಿಪಿಎಂನ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಒತ್ತಾಯಿಸಿದ್ದಾರೆ.
ಜಾತ್ಯತೀತತೆ ಮತ್ತು ಸಮಾಜವಾದಿ ಅಂಶಗಳನ್ನು ತನ್ನ ಪೀಠಿಕೆಯಲ್ಲಿ ಸೇರಿಸುವ ಮೂಲಕ ಸಂವಿಧಾನವು ದೇಶದ ಧಾರ್ಮಿಕ ಚಿತ್ರಣವನ್ನು ಸಂಕುಚಿತಗೊಳಿಸಿದೆ ಎಂದು ಪಂಕಜ್ ಹೇಳಿಕೆ ನೀಡಿದ್ದರು.
ಈ ಬಗ್ಗೆ ಯೆಚೂರಿ ಅವರು ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ. ನ್ಯಾಯಮೂರ್ತಿ ಮಿಥಾಲ್ ಅವರು ಗಂಭೀರವಾದ ದುರ್ನಡತೆಯನ್ನು ಪ್ರದರ್ಶಿಸಿದ್ದಾರೆ. ಅವರ ವಿರುದ್ಧ ಗಂಭೀರ ದೂರೊಂದನ್ನು ದಾಖಲಿಸಬೇಕು ಎಂದು ಪತ್ರದಲ್ಲಿ ಹೇಳಿದ್ದಾರೆ.
‘ಸಂವಿಧಾನವು ಜಾತ್ಯತೀತತೆ ಮತ್ತು ಸಮಾಜವಾದವನ್ನು ತನ್ನ ಪೀಠಿಕೆಯಲ್ಲಿ ಅಳವಡಿಸಿಕೊಳ್ಳುವ ಮೂಲಕ ದೇಶದ ಧಾರ್ಮಿಕ ಚಿತ್ರಣವನ್ನು ಸಂಕುಚಿತಗೊಳಿಸಿದೆ. ನಾವು ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಇದನ್ನು ಬದಲಾಯಿಸುತ್ತೇವೆ’ ಎಂದು ನ್ಯಾಯಮೂರ್ತಿ ಮಿಥಾಲ್ ಅವರು ಜಮ್ಮುವಿನಲ್ಲಿ ಡಿಸೆಂಬರ್ 5 ರಂದು ಆರ್ಎಸ್ಎಸ್ ಸಂಯೋಜಿತ ಅಖಿಲ ಭಾರತೀಯ ಆದಿವಕ್ತ ಪರಿಷತ್ ಆಯೋಜಿಸಿದ ಕಾರ್ಯಕ್ರಮದಲ್ಲಿ ನೀಡಿರುವ ಹೇಳಿಕೆಯನ್ನು ಯೆಚೂರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
‘ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯೊಬ್ಬರು ನಿರ್ದಿಷ್ಟ ಉದ್ದೇಶವನ್ನು ಹೊಂದಿರುವ ಸಂಘಟನೆಯ ಕಾರ್ಯಕ್ರಮದಲ್ಲಿ ಸಂವಿಧಾನದ ವಿರುದ್ಧ ಹೇಳಿಕೆ ನೀಡಿರುವುದು ಕ್ಷಮಿಸಲಾರದ ಅಪರಾಧವಾಗಿದೆ. ಇದು ಅವರು ಸ್ವೀಕರಿಸಿದ ಪ್ರಮಾಣವಚನದ ಉಲ್ಲಂಘನೆಯಾಗಿದೆ’ ಎಂದು ಯೆಚೂರಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.