ADVERTISEMENT

ಸಲ್ಮಾನ್‌ ನಿವಾಸದ ಬಳಿ ದಾಳಿ | ತನಿಖೆಯ ಸ್ಥಿತಿಗತಿ ವರದಿ ಕೇಳಿದ ಬಾಂಬೆ ಹೈಕೋರ್ಟ್‌

ಪಿಟಿಐ
Published 15 ಮೇ 2024, 16:00 IST
Last Updated 15 ಮೇ 2024, 16:00 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮುಂಬೈ: ನಟ ಸಲ್ಮಾನ್‌ ಖಾನ್ ನಿವಾಸ ಬಳಿ ಗುಂಡು ಹಾರಿಸಿದ ಪ್ರಕರಣದಲ್ಲಿ ಬಂಧಿತ ಆರೋಪಿಯೊಬ್ಬ ಪೊಲೀಸ್‌ ಕಸ್ಟಡಿಯಲ್ಲಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಪ್ರಕರಣ ಕುರಿತು ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದ ಸ್ಥಿತಿಗತಿ ವರದಿ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್‌ ಬುಧವಾರ ಸೂಚಿಸಿದೆ.

ಬಂಧಿತ ಆರೋಪಿ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾದ ಪೊಲೀಸ್‌ ಠಾಣೆಗೆ ಸಂಬಂಧಿಸಿದ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳು ಹಾಗೂ ಪೊಲೀಸ್‌ ಅಧಿಕಾರಿಗಳ ಮೊಬೈಲ್‌ ಕರೆಗಳ ಮಾಹಿತಿಯನ್ನು ಸಂರಕ್ಷಿಸಿ ಇಡಬೇಕು ಎಂದೂ ಹೈಕೋರ್ಟ್‌ ನಿರ್ದೇಶನ ನೀಡಿದೆ.

ADVERTISEMENT

ನ್ಯಾಯಮೂರ್ತಿಗಳಾದ ಸಂದೀಪ್ ಮಾರ್ನೆ ಹಾಗೂ ನೀಲಾ ಗೋಖಲೆ ಅವರು ಇದ್ದ ರಜಾಕಾಲದ ನ್ಯಾಯಪೀಠ ಈ ನಿರ್ದೇಶನ ನೀಡಿತು.

ಮುಂಬೈ ಕ್ರೈಂ ಬ್ರ್ಯಾಂಚ್‌ ಪೊಲೀಸ್ ಲಾಕಪ್‌ನಲ್ಲಿದ್ದಾಗ, ಶೌಚಾಲಯದಲ್ಲಿ ಮೇ 1ರಂದು ಮೃತಪಟ್ಟಿದ್ದ ಆರೋಪಿ ಅನುಜ್‌ ಥಾಪನ್‌ ಎಂಬುವವರ ತಾಯಿ ರೀಟಾ ದೇವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠ ನಡೆಸಿತು.

ಅನುಜ್ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ಹೇಳುತ್ತಿದ್ದರೆ, ಆತನನ್ನು ಹತ್ಯೆ ಮಾಡಲಾಗಿದೆ ಎಂದು ತಾಯಿ ರೀಟಾ ದೇವಿ ಆರೋಪಿಸಿದ್ದಾರೆ. ಈ ಕುರಿತು ಮೇ 3ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಅವರು, ಈ ಕೃತ್ಯವನ್ನು ಮುಚ್ಚಿ ಹಾಕಲು ಪೊಲೀಸರು ಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.

ತನ್ನ ಮಗನ ಸಾವಿನ ಕುರಿತ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ದೇಶನ ನೀಡುವಂತೆಯೂ ಅವರು ಅರ್ಜಿಯಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.