ನವದೆಹಲಿ: ಮಧ್ಯಪ್ರದೇಶದ ಧರ್ ಜಿಲ್ಲೆಯಲ್ಲಿ ಇರುವ ‘ಭೋಜಶಾಲಾ’ದ ವೈಜ್ಞಾನಿಕ ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಬಹುದೇ ಎಂಬುದನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿ ಸೂಚಿಸಿದೆ.
ಭೋಜಶಾಲಾ ತಮ್ಮದು ಎಂದು ಹಿಂದೂಗಳು ಹಾಗೂ ಮುಸ್ಲಿಮರು ಹಕ್ಕು ಪ್ರತಿಪಾದಿಸಿದ್ದಾರೆ. ಭೋಜಶಾಲಾ ಯಾವ ಸಮುದಾಯಕ್ಕೆ ಸೇರಿದ್ದು ಎಂಬುದನ್ನು ತೀರ್ಮಾನಿಸಲು ಅಲ್ಲಿ ವೈಜ್ಞಾನಿಕ ಸಮೀಕ್ಷೆ ಆಗಬೇಕು ಎಂದು ಮಧ್ಯಪ್ರದೇಶ ಹೈಕೋರ್ಟ್ ಮಾರ್ಚ್ 11ರಂದು ಆದೇಶಿಸಿದೆ. ಇದನ್ನು ಮೌಲಾನಾ ಕಮಾಲುದ್ದೀನ್ ವೆಲ್ಫೇರ್ ಸೊಸೈಟಿಯು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದೆ.
ಭೋಜಶಾಲಾ ಸಂಕೀರ್ಣದ ಸಮೀಕ್ಷೆಯನ್ನು ಆರು ವಾರಗಳಲ್ಲಿ ನಡೆಸಬೇಕು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ಮಾರ್ಚ್ 11ರ ಆದೇಶದಲ್ಲಿ ಸೂಚಿಸಲಾಗಿದೆ.
ಹಿಂದೂಗಳ ಪರವಾಗಿ ಹಾಜರಿದ್ದ ವಕೀಲ ವಿಷ್ಣುಶಂಕರ್ ಜೈನ್ ಅವರು, ಎಎಸ್ಐ ತನ್ನ ವರದಿಯನ್ನು ಈಗಾಗಲೇ ಸಲ್ಲಿಸಿದೆ ಎಂದು ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್.ವಿ.ಎನ್. ಭಟ್ಟಿ ಅವರಿದ್ದ ಸುಪ್ರೀಂ ಕೋರ್ಟ್ನ ವಿಭಾಗೀಯ ಪೀಠಕ್ಕೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.