
ನವದೆಹಲಿ (ಪಿಟಿಐ): ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆಗೆ ಲೋಕಸಭಾ ಸ್ಪೀಕರ್ ರಚಿಸಿರುವ ತನಿಖಾ ಸಮಿತಿಯನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ಸೂಚಿಸಿದೆ.
ನ್ಯಾಯಮೂರ್ತಿ ದೀಪಂಕರ್ ದತ್ತಾ, ಆಗಸ್ಟೀನ್ ಜಾರ್ಜ್ ಮಸೀಹ್ ಅವರ ಪೀಠವು ಈ ಸಂಬಂಧ ಪ್ರತಿಕ್ರಿಯಿಸುವಂತೆ ಲೋಕಸಭಾ ಸ್ಪೀಕರ್ ಕಚೇರಿ, ಎರಡೂ ಸದನಗಳ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು 2026ರ ಜನವರಿಗೆ ಪೀಠ ನಿಗದಿಪಡಿಸಿದೆ.
ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಅರವಿಂದ ಕುಮಾರ್, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಣಿಂದರ್ ಮೋಹನ್ ಶ್ರೀವಾಸ್ತವ ಮತ್ತು ಕರ್ನಾಟಕ ಹೈಕೋರ್ಟ್ನ ಹಿರಿಯ ವಕೀಲ ಬಿ.ವಿ. ಆಚಾರ್ಯ ಅವರು ತನಿಖಾ ಸಮಿತಿಯ ಸದಸ್ಯರಾಗಿದ್ದಾರೆ.
ಯಶವಂತ್ ಅವರ ಅಧಿಕೃತ ನಿವಾಸದಲ್ಲಿ ಮಾರ್ಚ್ 14ರಂದು ಅರೆ ಸುಟ್ಟ ನೋಟುಗಳ ಕಂತೆಗಳು ಪತ್ತೆಯಾದ ನಂತರ ಅವರನ್ನು ದೆಹಲಿಯಿಂದ ಅಲಹಾಬಾದ್ ಹೈಕೋರ್ಟ್ಗೆ ವಾಪಸ್ ಕಳುಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.