ADVERTISEMENT

‘ದೇಶಭ್ರಷ್ಟ ಆರ್ಥಿಕ ಅಪರಾಧಿ’: ಮಲ್ಯ ಮನವಿಗೆ ಪ್ರತಿಕ್ರಿಯಿಸಲು ಸುಪ್ರೀಂ ಆದೇಶ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2018, 9:22 IST
Last Updated 7 ಡಿಸೆಂಬರ್ 2018, 9:22 IST
ವಿಜಯ್ ಮಲ್ಯ
ವಿಜಯ್ ಮಲ್ಯ   

ನವದೆಹಲಿ:‘ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಲು ಹಾಗೂ ನನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಮನವಿಗೆ ತಡೆ ನೀಡಬೇಕು’ ಎಂಬ ಉದ್ಯಮಿ ವಿಜಯ ಮಲ್ಯ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಮಲ್ಯ ಅವರ ಅರ್ಜಿಯನ್ನುಬಾಂಬೆ ಹೈಕೋರ್ಟ್ ನವೆಂಬರ್ 22ರಂದು ವಜಾಗೊಳಿಸಿತ್ತು. ಇದಾದ ನಂತರ ಮಲ್ಯ ಸುಪ್ರೀಂ ಮೆಟ್ಟಿಲೇರಿದ್ದರು.

‘ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ’ಯಡಿ ಮಲ್ಯ ಅವರನ್ನು ದೇಶಭ್ರಷ್ಟ ಎಂದು ಘೋಷಿಸಲು ಅನುಮತಿ ನೀಡುವಂತೆ ಕೋರಿದ್ದ ಇ.ಡಿ, ಈ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್‌ಎ) ಕಾಯ್ದೆಯ ವಿಶೇಷ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ADVERTISEMENT

ಆರೋಪಿಯೊಬ್ಬನನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಸಾರಿದರೆ, ತನಿಖೆ ನಡೆಸುವ ಸಂಸ್ಥೆಯು ಆರೋಪಿಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಈ ಕಾಯ್ದೆ ಅವಕಾಶ ಕಲ್ಪಿಸುತ್ತದೆ.

ಭಾರತೀಯ ಸ್ಟೇಟ್ ಬ್ಯಾಂಕ್‍ನ 12 ಬ್ಯಾಂಕ್‍ಗಳಿಂದ ಮಲ್ಯ ಪಡೆದುಕೊಂಡಿರುವ ಸಾಲದ ಬಗ್ಗೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು ಕೇಂದ್ರ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿದೆ.

ಮಲ್ಯ ಅವರನ್ನು ಬ್ರಿಟಿನ್‍ನಿಂದ ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ವೆಸ್ಟ್ ಮಿನಿಸ್ಟರ್ ಮೆಜಿಸ್ಟ್ರೇಟ್ ನ್ಯಾಯಾಲಯ ಸೋಮವಾರ ತೀರ್ಪು ನೀಡಲಿದೆ.ಈ ತೀರ್ಪು ದಿನಾಂಕ ಹತ್ತಿರ ಬರುತ್ತಿದ್ದಂತೆ ತಾನು ಅಸಲು ಸಾಲ ಪಾವತಿ ಮಾಡಲು ಸಿದ್ಧ ಎಂದು ಎರಡು ದಿನಗಳ ಹಿಂದೆಯಷ್ಟೇ ಮಲ್ಯ ಟ್ವೀಟಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.