ADVERTISEMENT

ಮಹಾರಾಷ್ಟ್ರ: ದಸರಾ ಮೆರವಣಿಗೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಎಸ್‌ಡಿಎಂಎಗೆ ಸೂಚನೆ

ಪಿಟಿಐ
Published 19 ಅಕ್ಟೋಬರ್ 2020, 9:51 IST
Last Updated 19 ಅಕ್ಟೋಬರ್ 2020, 9:51 IST
ಸುಪ್ರೀಂಕೋರ್ಟ್‌
ಸುಪ್ರೀಂಕೋರ್ಟ್‌   

ನವದೆಹಲಿ: ಕೋವಿಡ್‌ ನಡುವೆಯೂ ದಸರಾ ಮೆರವಣಿಗೆ ನಡೆಸಲು ಅನುಮತಿ ನೀಡುವಂತೆ ಕೋರಿ ನಾಂದೇಡ್‌ ಗುರುದ್ವಾರ ಅಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಕೋರ್ಟ್‌ ಮಹಾರಾಷ್ಟ್ರ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ (ಎಸ್‌ಡಿಎಂಎ) ಸೂಚಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗೇಶ್ವರ ರಾವ್‌ ನೇತೃತ್ವದ ಪೀಠವು ವಾಸ್ತವ ಸ್ಥಿತಿಯನ್ನು ಪರಿಗಣಿಸಿ ದಸರಾ ಮೆರವಣಿಗೆ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದೆ.

ಮಂಡಳಿಯು ಸಾಂಪ್ರದಾಯಿಕ ರೀತಿಯಲ್ಲಿ ದಸರಾ ಮೆರವಣಿಗೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದೆ. ಆದರೆ, ಮಹಾರಾಷ್ಟ್ರ ಸರ್ಕಾರವು ಕೊರೊನಾ ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಸಾಂಪ್ರದಾಯಿಕವಾಗಿ ದಸರಾ ಮೆರವಣಿಗೆ ನಡೆಸುವುದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು.

ADVERTISEMENT

ಈ ಹಿನ್ನೆಲೆಯಲ್ಲಿ ನಾಂದೇಡ್‌ ಗುರುದ್ವಾರ ಆಡಳಿತ ಮಂಡಳಿ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ದಸರಾ ಮೆರವಣಿಗೆ ನಡೆಸಲು ಅನುಮತಿ ನೀಡುವ ಬಗ್ಗೆ ಎಸ್‌ಡಿಎಂಎ ತೆಗೆದುಕೊಳ್ಳುವ ನಿರ್ಧಾರದಿಂದ ಸಮಾಧಾನವಾಗದಿದ್ದರೆ ಮಂಡಳಿಯು ಬಾಂಬೆ ಹೈಕೋರ್ಟ್‌ ಮೊರೆ ಹೋಗಬಹುದು ಎಂದು ಸುಪ್ರೀಂಕೋರ್ಟ್‌ನ‌ ಪೀಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.