ನವದೆಹಲಿ: ದೇಶದಲ್ಲಿ ಧಾರ್ಮಿಕ ಮತಾಂತರಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್, ಬುಧವಾರ ವಜಾಗೊಳಿಸಿದೆ.
ಹಿಂದೂ ಮತ್ತು ಅಲ್ಪಸಂಖ್ಯಾತ ಸಮುದಾಯದವರನ್ನು ಗುರಿಯಾಗಿಸಿಕೊಂಡು ಆಮಿಷವೊಡ್ಡಿ ಮತಾಂತರ ಮಾಡಲಾಗುತ್ತಿದೆ. ಇದಕ್ಕೆ ನಿಯಂತ್ರಣ ಹೇರಬೇಕಿದೆ ಎಂದು ಕರ್ನಾಟಕ ಮೂಲದ ಅರ್ಜಿದಾರ ಜೆರೋಮ್ ಆಂಟೊ ಎಂಬುವರು ಅರ್ಜಿ ಸಲ್ಲಿಸಿದ್ದರು.
ಇದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ತ್ರಿದಸ್ಯ ನ್ಯಾಯಪೀಠವು, ‘ಈ ವಿಷಯದಲ್ಲಿ ನ್ಯಾಯಾಲಯ ಏಕೆ ಮಧ್ಯ ಪ್ರವೇಶಿಸಬೇಕು? ಈ ನಿಟ್ಟಿನಲ್ಲಿ ಆಡಳಿತಾತ್ಮಕ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿತು.
‘ಯಾರಾದರೂ ಮತಾಂತರಕ್ಕೆ ಯತ್ನಿಸಿದ್ದರೆ ಅಂತಹ ಸಂದರ್ಭದಲ್ಲಿ ಮಾತ್ರ ಕೋರ್ಟ್ ಅದನ್ನು ವಿಚಾರಣೆಗೆ ಪರಿಗಣಿಸುತ್ತದೆ’ ಎಂದು ಹೇಳಿತು.
‘ಇದು ಯಾವ ತರಹದ ಅರ್ಜಿ? ಪ್ರತಿಯೊಬ್ಬರು ಪಿಐಎಲ್ ಅನ್ನು ಒಂದು ಸಾಧನವಾಗಿ ಬಳಸಿಕೊಂಡು ನ್ಯಾಯಾಲಯಕ್ಕೆ ಈ ರೀತಿಯ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ’ ಎಂದು ಹೇಳಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.