ನವದೆಹಲಿ: ಪುರಿಯ ಶ್ರೀ ಜಗನ್ನಾಥ ದೇವಸ್ಥಾನದಲ್ಲಿ ಒಡಿಶಾ ಸರ್ಕಾರವು ಅಕ್ರಮವಾಗಿ ಉತ್ಖನನ ನಡೆಸುತ್ತಿದ್ದು, ಕಟ್ಟಡ ನಿರ್ಮಾಣ ಕಾರ್ಯ ನಡೆಸುತ್ತಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಶುಕ್ರವಾರ ಅರ್ಜಿಯನ್ನು ವಜಾಗೊಳಿಸಿದೆ. ಹೆಚ್ಚಿನ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ನಿರ್ಮಾಣ ಕಾಮಗಾರಿಯು ನಡೆಯುತ್ತಿದೆ. ಇಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು(ಪಿಐಎಲ್) ಸಾರ್ವಜನಿಕ ಹಿತಾಸಕ್ತಿಗೇ ಹಾನಿಯುಂಟು ಮಾಡುವಂತಿದೆ ಎಂದು ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಪಿಐಎಲ್ಗಳು ಅಣಬೆಗಳಂತೆ ಬೆಳೆಯುತ್ತಿವೆ. ಇದು ಕಾನೂನಿನ ದುರುಪಯೋಗ. ಕ್ಷುಲ್ಲಕ ಅರ್ಜಿಗಳನ್ನು ಸಲ್ಲಿಸುವ ಅಭ್ಯಾಸಕ್ಕೆ ಅರ್ಜಿ ತಿರಸ್ಕಾರವು ಎಚ್ಚರಿಕೆಯಾಗಿದೆ ಎಂದು ಉಚ್ಛ ನ್ಯಾಯಾಲಯ ತಿಳಿಸಿದೆ.
ದೇವಸ್ಥಾನದಲ್ಲಿ ಅಕ್ರಮ ಉತ್ಖನನ ಮತ್ತು ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಆರೋಪಿಸಿ ಅರ್ಧೆಂದು ಕುಮಾರ್ ದಾಸ್ ಮತ್ತು ಇತರರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನಿರ್ಮಾಣ ಕಾರ್ಯವು ಪುರಾತನ ದೇವಸ್ಥಾನದ ರಚನೆಯ ಮೇಲೆ ಪರಿಣಾಮ ಬೀರಲಿದೆ ಎಂದು ದೂರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.