ನವದೆಹಲಿ: ‘10 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಮನ್ನಾ ಮಾಡುವಂತೆ ಕೋರಿ ‘ಸೋಷಿಯಲ್ ಜ್ಯೂರಿಸ್ಟ್’ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಕೋವಿಡ್ನಿಂದಾಗಿ ಕೆಲ ಪೋಷಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಪರೀಕ್ಷಾ ಶುಲ್ಕ ಕಟ್ಟುವುದು ಕಷ್ಟ. ಹೀಗಾಗಿ ಶುಲ್ಕದಿಂದ ವಿನಾಯಿತಿ ನೀಡಬೇಕೆಂದು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಇ) ಹಾಗೂ ದೆಹಲಿ ಸರ್ಕಾರಕ್ಕೆ ಸೂಚಿಸಬೇಕೆಂದು‘ಸೋಷಿಯಲ್ ಜ್ಯೂರಿಸ್ಟ್’ ಸಂಸ್ಥೆ ಮನವಿ ಮಾಡಿತ್ತು.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಸುಭಾಶ್ ರೆಡ್ಡಿ ಮತ್ತು ಎಂ.ಆರ್.ಶಾ ಅವರಿದ್ದ ಪೀಠವು ಈ ಅರ್ಜಿಯನ್ನು ತಿರಸ್ಕರಿಸಿತು.
‘ಶುಲ್ಕದಿಂದ ವಿನಾಯಿತಿ ನೀಡಿ ಎಂದು ನ್ಯಾಯಾಲಯವು ಆಡಳಿತಾರೂಢ ಸರ್ಕಾರಕ್ಕೆ ನಿರ್ದೇಶನ ನೀಡುವುದಾದರೂ ಹೇಗೆ’ ಎಂದು ಪೀಠವು ಕೇಳಿತು.
ಸೆಪ್ಟೆಂಬರ್28ರಂದು ಇದರ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ಈ ಅರ್ಜಿಯನ್ನು ಪ್ರಾತಿನಿಧ್ಯವೆಂದು ಪರಿಗಣಿಸಬೇಕು. ಶುಲ್ಕದಿಂದ ವಿನಾಯಿತಿ ನೀಡಲು ಸರ್ಕಾರದ ನೀತಿಯಲ್ಲಿ ಅವಕಾಶವಿದೆಯೇ ಎಂಬುದನ್ನೂ ಗಮನಿಸಬೇಕು. ಈ ಸಂಬಂಧ ಮೂರು ವಾರಗಳೊಳಗೆ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ದೆಹಲಿ ಸರ್ಕಾರ ಹಾಗೂ ಸಿಬಿಎಸ್ಇಗೆ ಸೂಚಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.