ನವದೆಹಲಿ: ಕಾಂಗ್ರೆಸ್ ಪಕ್ಷದ ಜೊತೆ ಬಿಎಸ್ಪಿಯ ಆರು ಶಾಸಕರ ವಿಲೀನ ಕುರಿತಂತೆ ರಾಜಸ್ಥಾನ ಸ್ಪೀಕರ್ ಕೈಗೊಂಡಿರುವ ನಿರ್ಧಾರಕ್ಕೆ ತಡೆನೀಡಬೇಕು ಎಂದು ಕೋರಿ ಬಿಜೆಪಿ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ, ‘ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅಪ್ರಸ್ತುತ’ ಎಂದು ಹೇಳುವ ಮೂಲಕ ವಿಲೇವಾರಿ ಮಾಡಿತು.
ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ವಿನೀತ್ ಶರಣ್, ಮತ್ತು ಎಂ.ಆರ್.ಶಾ ಅವರಿದ್ದ ಪೀಠದ ಮುಂದೆ ಸ್ಪೀಕರ್ ಪರವಾಗಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ‘ಈ ಸಂಬಂಧ ಬಿಜೆಪಿ ಶಾಸಕ ಮದನ್ ದಿಲಾವರ್ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ರಾಜಸ್ಥಾನ ಹೈಕೋರ್ಟ್ ಈಗಾಗಲೇ ಆದೇಶ ನೀಡಿದೆ’ ಎಂದು ತಿಳಿಸಿದರು.
‘ಮೆರಿಟ್ ಆಧರಿಸಿ ಮೂರು ತಿಂಗಳಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಸ್ಪೀಕರ್ ಅವರಿಗೆ ಹೈಕೋರ್ಟ್ ಸೂಚಿಸಿದೆ’ ಎಂದು ಸಿಬಲ್ ಅವರು ಪೀಠದ ಗಮನಕ್ಕೆ ತಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.