ADVERTISEMENT

ಉತ್ತರಪ್ರದೇಶ: ಎಎಪಿ ನಾಯಕ ಸಂಜಯ್‌ ಸಿಂಗ್‌ಗೆ ಕಾನೂನಾತ್ಮಕ ರಕ್ಷಣೆ

ಪಿಟಿಐ
Published 9 ಫೆಬ್ರುವರಿ 2021, 9:06 IST
Last Updated 9 ಫೆಬ್ರುವರಿ 2021, 9:06 IST
ಸಂಜಯ್‌ ಸಿಂಗ್‌
ಸಂಜಯ್‌ ಸಿಂಗ್‌   

ನವದೆಹಲಿ: ಉತ್ತರ ಪ್ರದೇಶದಲ್ಲಿ ದಾಖಲಾಗಿರುವ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್‌ ಆದ್ಮಿ ಪಕ್ಷದ ನಾಯಕ, ಸಂಸದ ಸಂಜಯ್‌ ಸಿಂಗ್‌ಗೆ ಸುಪ್ರೀಂಕೋರ್ಟ್‌ ಮಂಗಳವಾರ ಕಾನೂನಾತ್ಮಕ ರಕ್ಷಣೆ ನೀಡಿದೆ.

ಸಂಜಯ್ ಸಿಂಗ್‌ ವಿರುದ್ಧ ಕಠಿಣ ಕ್ರಮಕೈಗೊಳ್ಳಬಾರದು ಎಂದು ಸುಪ್ರೀಂಕೋರ್ಟ್‌ ಸೂಚಿಸಿದೆ. ‘ಆದರೆ ಅವರನ್ನು ವಿಚಾರಣೆಗೆ ಒಳಪಡಿಸಲು ಉತ್ತರ ಪ್ರದೇಶ ಪೊಲೀಸರು ರಾಜ್ಯಸಭಾ ಸಭಾಪತಿಯಿಂದ ಅನುಮತಿ ಪಡೆಯಬಹುದು’ ಎಂದು ನ್ಯಾಯಾಲಯ ಹೇಳಿದೆ.

‘ಸಂಜಯ್‌ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ಉತ್ತರ ಪ್ರದೇಶ ಪೊಲೀಸರು ಯಾವುದೇ ಕಾರ್ಯವಿಧಾನ ಅನುಸರಿಸಿಲ್ಲ. ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿಯನ್ನು ಕೂಡ ಪಡೆಯಲಿಲ್ಲ’ ಎಂದು ಸಂಜಯ್‌ ಸಿಂಗ್‌ ಪರ ವಕೀಲ ವಿವೇಕ್‌ ತಂಖಾ ಅವರು ನ್ಯಾಯಾಲಯಕ್ಕೆ ತಿಳಿಸಿದರು.

ADVERTISEMENT

ಆಗಸ್ಟ್‌ 12 ರಂದು ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡಿದ ಸಂಜಯ್ ಸಿಂಗ್‌ ಅವರು,‘‍ಉತ್ತರ ಪ್ರದೇಶ ಸರ್ಕಾರ, ಕೆಲವೊಂದು ವರ್ಗಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ದೂರಿದ್ದರು. ಈ ಸಂಬಂಧ ಉತ್ತರ ಪ್ರದೇಶದ ಹಲವು ಪೊಲೀಸ್‌ ಠಾಣೆಗಳಲ್ಲಿ ಸಂಜಯ್‌ ಸಿಂಗ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿಸುಪ್ರೀಂಕೋರ್ಟ್‌ ಮೊರೆ ಹೋಗಿರುವ ಸಂಜಯ್‌ ಸಿಂಗ್‌ ಅವರು, ‘ಎಲ್ಲಾ ಎಫ್‌ಐಆರ್‌ಗಳನ್ನು ಒಂದೇ ಪ್ರಕರಣ ಎಂದು ದಾಖಲಿಸುವಂತೆ ಅಥವಾ ಎಫ್‌ಐಆರ್‌ ಅನ್ನು ರದ್ದುಗೊಳಿಸುವಂತೆ ಸೂಚನೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಅರ್ಜಿ ಬಗ್ಗೆ ಪ್ರತಿಕ್ರಿಯಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.