ADVERTISEMENT

ಉನ್ನಾವ್ ಅತ್ಯಾಚಾರ ಪ್ರಕರಣ: ತನಿಖೆಗೆ ಮತ್ತೆರಡು ವಾರ ಕಾಲಾವಕಾಶ

ಪಿಟಿಐ
Published 19 ಆಗಸ್ಟ್ 2019, 20:18 IST
Last Updated 19 ಆಗಸ್ಟ್ 2019, 20:18 IST
   

ನವದೆಹಲಿ: ಉನ್ನಾವ್‌ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರು ಸಂಚರಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆಸಿದ ಪ್ರಕರಣದ ತನಿಖೆ ಪೂರ್ಣಗೊಳಿಸಲು ಸಿಬಿಐಗೆ ಮತ್ತೆ ಎರಡು ವಾರಗಳ ಕಾಲಾವಕಾಶವನ್ನು ಸುಪ್ರೀಂ ಕೋರ್ಟ್‌ ಸೋಮವಾರ ನೀಡಿದೆ.

ಈ ರಸ್ತೆ ಅಪಘಾತದಲ್ಲಿ ಸಂತ್ರಸ್ತೆ ಹಾಗೂ ಆಕೆಯ ವಕೀಲರು ತೀವ್ರವಾಗಿ ಗಾಯಗೊಂಡಿದ್ದು ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತ್ರಸ್ತೆಯ ಸಂಬಂಧಿಕರಿಬ್ಬರು ಮೃತಪಟ್ಟಿದ್ದರು.

ತನಿಖೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್‌ ಈ ಮೊದಲು ಎರಡು ವಾರಗಳ ಕಾಲಾವಕಾಶ ನೀಡಿತ್ತು. ಮತ್ತೆ ಇನ್ನೆರಡು ವಾರ ಕಾಲಾವಕಾಶ ನೀಡಿದೆ.

ADVERTISEMENT

ಸಂತ್ರಸ್ತೆ ಮತ್ತು ವಕೀಲರ ಹೇಳಿಕೆ ಇನ್ನೂ ಪಡೆದಿಲ್ಲ. ಕೆಲವು ಸಾಕ್ಷ್ಯಗಳನ್ನು ವಿಶ್ಲೇಷಿಸುವ ಅಗತ್ಯವಿದ್ದು, ತನಿಖೆಗೆ ನಾಲ್ಕು ವಾರಗಳ ಕಾಲಾವಕಾಶ ನೀಡಬೇಕು ಎಂದು ಸಿಬಿಐ ಪರ ವಕೀಲ ರಜತ್‌ ನಾಯರ್‌ ಕೋರಿಕೆ ಸಲ್ಲಿಸಿದರು.

ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಅನಿರುದ್ಧ ಬೋಸ್ ಅವರಿದ್ದ ಪೀಠವು, ಈ ಪ್ರಕರಣದ ವಿಚಾರಣೆ ನಡೆಸಿ ಸಿಬಿಐಗೆ ತನಿಖೆ ಪೂರ್ಣಗೊಳಿಸಲು ಕಾಲಾವಕಾಶ ನೀಡಿತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಂತ್ರಸ್ತೆಯ ವಕೀಲರಿಗೆ ₹5 ಲಕ್ಷ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿತು.

ವಿಚಾರಣೆಯನ್ನು ಸೆಪ್ಟೆಂಬರ್‌ 6ಕ್ಕೆ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.