ADVERTISEMENT

ಡಿಕೆಶಿ ವಿರುದ್ಧದ ವಿಚಾರಣೆ ತಡೆಗೆ ‘ಸುಪ್ರೀಂ’ ನಕಾರ

ಆದಾಯ ತೆರಿಗೆ ಇಲಾಖೆಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 20 ಜುಲೈ 2020, 16:14 IST
Last Updated 20 ಜುಲೈ 2020, 16:14 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ ನಡೆಸುತ್ತಿರುವ ತನಿಖೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. 2017ರಲ್ಲಿ ಶಿವಕುಮಾರ್‌ ನಿವಾಸದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಶೋಧ ನಡೆಸಿದ್ದರು. ಘೋಷಿತ ವರಮಾನಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿ ಆಗ ಪತ್ತೆಯಾಗಿತ್ತು ಎಂದು ಆದಾಯ ತೆರಿಗೆ ಇಲಾಖೆಯು ಆರೋಪಿಸಿತ್ತು.

ಮುಖ್ಯನ್ಯಾಯಮೂರ್ತಿ ಎಸ್.ಎ. ಬೊಬಡೆ ಹಾಗೂ ನ್ಯಾಯಮೂರ್ತಿಗಳಾದ ಆರ್. ಸುಭಾಷ್ ರೆಡ್ಡಿ ಮತ್ತು ಎ.ಎಸ್. ಬೋಪಣ್ಣ ಅವರ ಪೀಠವು ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಆದಾಯ ತೆರಿಗೆ ಇಲಾಖೆಗೆ ನೋಟಿಸ್ ನೀಡಿತು. ಉತ್ತರಿಸಲು ನಾಲ್ಕು ವಾರಗಳ ಕಾಲಾವಕಾಶ ಕೊಟ್ಟಿದೆ.

ಶಿವಕುಮಾರ್ ವಿರುದ್ಧ ಆದಾಯ ತೆರಿಗೆಯ ಉಪನಿರ್ದೇಶಕರು ದೂರು ಸಲ್ಲಿಸಿದ್ದರು. ಪ್ರಕರಣ ಕೈಬಿಡುವಂತೆ ಮಾಡಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮಾನ್ಯ ಮಾಡಿರಲಿಲ್ಲ.ನವೆಂಬರ್ 2019ರ‌ಲ್ಲಿ ಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಶಿವಕುಮಾರ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.ಬೆಂಗಳೂರಿನ ಸೆಷನ್ಸ್‌ ನ್ಯಾಯಾಧೀಶರು ಹೊರಡಿಸಿದ್ದ ಆದೇಶ ರದ್ದುಗೊಳಿಸಲು ಕೋರಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.