ನವದೆಹಲಿ: ’ಡಿ‘ ದರ್ಜೆಯ ನೌಕರರೊಬ್ಬರು ಆರ್ಥಿಕ ಸಂಕಷ್ಟದಲ್ಲಿರುವಾಗ ಅವರು ನೇರವಾಗಿ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಬಹುದು. ಅದು ದೊಡ್ಡ ದುರ್ನಡತೆಯಲ್ಲ. ಆ ಕಾರಣಕ್ಕಾಗಿ ಅವರನ್ನು ಸೇವೆಯಿಂದ ವಜಾಗೊಳಿಸುವ ಶಿಕ್ಷೆ ವಿಧಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠವು ಉತ್ತರ ಪ್ರದೇಶದ ಜಿಲ್ಲಾ ನ್ಯಾಯಾಲಯದ ’ಡಿ‘ ದರ್ಜೆಯ ನೌಕರ ಛತ್ರಪಾಲ್ ಅವರ ಅರ್ಜಿ ವಿಚಾರಣೆ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಲಂಚ ಮತ್ತು ಜಾತಿ ತಾರತಮ್ಯದ ಸುಳ್ಳು ಆರೋಪಗಳ ಆಧಾರದ ಮೇಲೆ 2007ರಲ್ಲಿ ನೌಕರ ಛತ್ರಪಾಲ್ ಅವರನ್ನು ಸರಿಯಾದ ಮಾರ್ಗ ಅನುಸರಿಸದೆ ನೇರವಾಗಿ ಅಲಹಾಬಾದ್ ಹೈಕೋರ್ಟ್ ಮತ್ತು ಮುಖ್ಯಮಂತ್ರಿಗೆ ಮನವಿ ಕಳುಹಿಸಿ, ಅವರನ್ನು ಸೇವೆಯಿಂದ ವಜಾಗೊಳಿಸಿದ್ದನ್ನು ಪೀಠವು ರದ್ದುಪಡಿಸಿತು. ನೌಕರನನ್ನು ಅದೇ ಹುದ್ದೆಯಲ್ಲಿ ಮುಂದುವರಿಸುವಂತೆಯೂ ಆದೇಶ ನೀಡಿದೆ.
ಸಾಮಾನ್ಯವಾಗಿ ತನಿಖಾಧಿಕಾರಿಯು ಸಲ್ಲಿಸಿದ ವರದಿಯಲ್ಲಿ ಮೇಲ್ಮನವಿ ನ್ಯಾಯಾಲಯ ಅಥವಾ ಸಕ್ಷಮ ಪ್ರಾಧಿಕಾರ ಮಧ್ಯಪ್ರವೇಶಿಸಬಾರದು ಎಂದು ಹೇಳಿದೆ. ಆದಾಗ್ಯೂ, ವಿಚಾರಣಾ ಅಧಿಕಾರಿಯು ತಪ್ಪಿತಸ್ಥರಿಂದ ಒತ್ತಾಯಪೂರ್ವಕವಾದ ಹೇಳಿಕೆಯನ್ನು ದಾಖಲಿಸಿಕೊಂಡಿರುವುದು ಕಂಡುಬಂದಾಗ ಯಾವಾಗಲೂ ಹಸ್ತಕ್ಷೇಪ ಮಾಡಬಹುದು ಎಂದು ಪೀಠ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.