ನವದೆಹಲಿ: ಕೋವಿಡ್ ಪರಿಸ್ಥಿತಿ ರಾಜಧಾನಿ ನವದೆಹಲಿಯಲ್ಲಿ ಬಿಗಡಾಯಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಕೇಂದ್ರ ಮತ್ತು ಎಲ್ಲ ರಾಜ್ಯ ಸರ್ಕಾರಗಳು ಎರಡು ದಿನಗಳಲ್ಲಿ ವಸ್ತು ಸ್ಥಿತಿ ವರದಿ ದಾಖಲಿಸಬೇಕು ಎಂದು ಸೂಚಿಸಿದೆ.
ದೆಹಲಿ ಮತ್ತು ಗುಜರಾತ್ನಲ್ಲಿ ಪರಿಸ್ಥಿತಿಯು ಹದಗೆಡುತ್ತಿದೆ. ಎಲ್ಲ ರಾಜ್ಯಗಳು ಸದ್ಯದ ಪರಿಸ್ಥಿತಿ, ನಿರ್ವಹಣೆ ಮತ್ತು ಕಡಿವಾಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಕುರಿತು ಸಮಗ್ರ ವರದಿಯನ್ನು ದಾಖಲಿಸಬೇಕು ಕೋರ್ಟ್ ಸೋಮವಾರ ಆದೇಶಿಸಿತು.
‘ದೆಹಲಿಯಲ್ಲಿ ಮುಖ್ಯವಾಗಿ ನವೆಂಬರ್ ತಿಂಗಳಲ್ಲಿ ಸ್ಥಿತಿ ಹದಗೆಟ್ಟಿದೆ’ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ದೆಹಲಿ ಸರ್ಕಾರ ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಸಂಜಯ್ ಜೈನ್ ಅವರಿಗ ತಿಳಿಸಿತು.
ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕ ಹಾಗೂ ಸೋಂಕು ಹೆಚ್ಚಳವಾಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು ಎಂದು ಸೂಚಿಸಿತು.
ನ್ಯಾಯಮೂರ್ತಿಗಳಾದ ಆರ್.ಎಸ್.ರೆಡ್ಡಿ ಮತ್ತು ಎಂ.ಆರ್.ಶಾ ಅವರೂ ಪೀಠದಲ್ಲಿ ಇದ್ದರು.
ಕೋವಿಡ್ ಪೀಡಿತರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಹಾಗೂ ಸೋಂಕಿನಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯಕ್ರಿಯೆ ಆಗುತ್ತಿಲ್ಲ ಎಂಬುದನ್ನು ಗಣನೆಗೆ ತೆಗೆದುಕೊಂಡ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 27ಕ್ಕೆ ಮುಂದೂಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.