ನವದೆಹಲಿ: ಕೋವಿಡ್–19 ಸಾಂಕ್ರಾಮಿಕ ರೋಗದಿಂದಾಗಿ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ಪರಿಹಾರ ನೀಡುವ ಕುರಿತು ಕೇಂದ್ರದ ಕಲ್ಯಾಣ ಯೋಜನೆಯನ್ನು ಗಮನಿಸಿರುವ ಸುಪ್ರೀಂ ಕೋರ್ಟ್, ಈ ಯೋಜನೆಯ ಮೇಲ್ವಿಚಾರಣೆಗಾಗಿ ರೂಪಿಸಿದ ಕಾರ್ಯವಿಧಾನದ ವಿವರಗಳನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೇಳಿದೆ.
ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠವು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಾರ್ಯದರ್ಶಿ ಅಥವಾ ಜಂಟಿ ಕಾರ್ಯದರ್ಶಿ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲು ನಿರ್ದೇಶನ ನೀಡಿದೆ.
ಈ ನೋಡಲ್ ಅಧಿಕಾರಿಗಳು ಅನಾಥ ಮಕ್ಕಳು ಮತ್ತು ಅವರ ಕಲ್ಯಾಣ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ಆ್ಯಮಿಕಸ್ ಕ್ಯೂರಿ ಗೌರವ್ ಅಗರ್ವಾಲ್ ಅವರೊಂದಿಗೆ ಸಂವಹನ ನಡೆಸಲಿದ್ದಾರೆ ಎಂದೂ ಕೋರ್ಟ್ ತಿಳಿಸಿದೆ.
ಇದಕ್ಕೆ ಸಂಬಂಧಿಸಿದಂತೆ ಮೊದಲು ತೆಲಂಗಾಣ, ತಮಿಳುನಾಡು, ಕೇರಳ, ಕರ್ನಾಟಕ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ ಮತ್ತು ಜಾರ್ಖಂಡ್ ಒಟ್ಟು ಹತ್ತು ರಾಜ್ಯಗಳ ಪ್ರಕರಣಗಳನ್ನು ಸೋಮವಾರ ಆಲಿಸುವುದಾಗಿಯೂ ನ್ಯಾಯಪೀಠವು ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.