ADVERTISEMENT

ಭಜರಂಗದಳದ ಕಾರ್ಯಕರ್ತ ಪ್ರವೀಣ್ ಖಾಂಡ್ಯ ಜಾಮೀನು ರದ್ದುಪಡಿಸಿದ ‘ಸುಪ್ರೀಂ’

​ಪ್ರಜಾವಾಣಿ ವಾರ್ತೆ
Published 16 ಜುಲೈ 2018, 19:30 IST
Last Updated 16 ಜುಲೈ 2018, 19:30 IST
ಪ್ರವೀಣ್ ಖಾಂಡ್ಯ
ಪ್ರವೀಣ್ ಖಾಂಡ್ಯ   

ನವದೆಹಲಿ: ಅಪಹರಣ ಮತ್ತು ಅಧಿಕಾರಿಯ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳದ ಕಾರ್ಯಕರ್ತ ಪ್ರವೀಣ್ ಖಾಂಡ್ಯನಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ರಾಜ್ಯ ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್‌ ಮನೋಹರ ಸಪ್ರೆ ಹಾಗೂ ಯು.ಯು. ಲಲಿತ್‌ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ ಸೋಮವಾರ ಈ ಆದೇಶ ನೀಡಿದೆ.

ಯಾವುದೇ ಆರೋಪಿಯ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ್ದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಈ ಹಿಂದೆ ನೀಡಿರುವ ತೀರ್ಪಿನ ಅನ್ವಯ ಈ ಆದೇಶ ಹೊರಡಿಸಲಾಗಿದೆ.

ADVERTISEMENT

2016ರಲ್ಲಿ ನಡೆದಿದ್ದ ತೇಜಸ್‌ ಗೌಡ ಅಪಹರಣ ಹಾಗೂ ಚಿಕ್ಕಮಗಳೂರಿನ ಡಿವೈಎಸ್‌ಪಿ ಕಲ್ಲಪ್ಪ ಹಂಡಿಬಾಗ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಗಳಲ್ಲಿ ಪ್ರವೀಣ್‌ ಖಾಂಡ್ಯ ಆರೋಪಿಯಾಗಿದ್ದ.ಅಪಹರಣ ಪ್ರಕರಣದಲ್ಲಿ ಹಂಡಿಬಾಗ ಅವರು ₹ 10 ಲಕ್ಷ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಕರಣ ಬೆಳಕಿಗೆ ಬಂದ ಕೂಡಲೇ ತಲೆ ಮರೆಸಿಕೊಂಡಿದ್ದ ಖಾಂಡ್ಯನಿಗೆ ರಾಜ್ಯ ಹೈಕೋರ್ಟ್‌ 2016ರ ಡಿಸೆಂಬರ್‌ 16ರಂದು ನಿರೀಕ್ಷಣಾ ಜಾಮೀನು ನೀಡಿತ್ತು.

ಹೈಕೋರ್ಟ್‌ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆಯನ್ನು ಕಳೆದ ಮೇ 18ರಂದು ನಡೆಸಿದ್ದ ನ್ಯಾಯಪೀಠವು, ಖಾಂಡ್ಯನ ವಿರುದ್ಧ ದಾಖಲಾಗಿರುವ ಎಲ್ಲ ಅಪರಾಧ ಪ್ರಕರಣಗಳ ವಿವರವನ್ನು ನಾಲ್ಕು ವಾರಗಳಲ್ಲಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿತ್ತು.

ಒಟ್ಟು 32 ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ಪ್ರವೀಣ ಖಾಂಡ್ಯ ಅವುಗಳಲ್ಲಿ 12 ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾನೆ ಎಂದು ರಾಜ್ಯ ಸರ್ಕಾರ ವಿವರ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.