ನವದೆಹಲಿ:ಕಾನೂನು ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ,ಮ್ಯಾಜಿಸ್ಟ್ರೇಟ್ ಎದುರು ಸಂತ್ರಸ್ತೆಯು ನೀಡಿರುವ ಹೇಳಿಕೆಯ ಪ್ರತಿಯನ್ನು ಪಡೆಯಲು ಆರೋಪಿ, ಬಿಜೆಪಿ ಮುಖಂಡ ಚಿನ್ಮಯಾನಂದ ಅವರಿಗೆ ಸುಪ್ರೀಂ ಕೋರ್ಟ್ ಅವಕಾಶವನ್ನು ನಿರಾಕರಿಸಿದೆ. ಈ ಕುರಿತಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಗುರುವಾರ ರದ್ದುಗೊಳಿಸಿದೆ.
ಸಿಆರ್ಪಿಸಿ ಸೆಕ್ಷನ್ 164ರಡಿ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಿರುವ ಹೇಳಿಕೆಯನ್ನು ವಿಚಾರಣೆ ಸಂದರ್ಭದಲ್ಲಿ ಸಾಕ್ಷ್ಯವಾಗಿ ಮುಂದಿಡಬಹುದು. ಜೊತೆಗೆ ಈ ಹೇಳಿಕೆಯು, ತನಿಖೆಯ ವೇಳೆ ಪೊಲೀಸರಿಗೆ ನೀಡಿರುವ ಹೇಳಿಕೆಗಿಂತಲೂ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದಿದೆ.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿಶಹಜಹಾನ್ಪುರ ಮೂಲದ ವಿದ್ಯಾರ್ಥಿನಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ವಿನೀತ್ ಶರಣ್ ಹಾಗೂ ಎಸ್.ರವೀಂದ್ರ ಭಟ್ ಅವರಿದ್ದ ಪೀಠವು ಈ ಅರ್ಜಿಯನ್ನು ಪುರಸ್ಕರಿಸಿದೆ. ಹೈಕೋರ್ಟ್, 2019ರ ನ.7ರಂದು ಸಂತ್ರಸ್ತೆಯ ಹೇಳಿಕೆಯ ಪ್ರತಿಯನ್ನು ಆರೋಪಿಗೆ ನೀಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿತ್ತು. ಈ ಆದೇಶಕ್ಕೆ ಕಳೆದ ವರ್ಷ ನವೆಂಬರ್ 15ರಂದು ಸುಪ್ರೀಂ ಕೋರ್ಟ್ ತಡೆ ನೀಡಿ, ರಾಜ್ಯ ಸರ್ಕಾರ ಹಾಗೂ ಚಿನ್ಮಯಾನಂದ ಅವರಿಂದ ಪ್ರತಿಕ್ರಿಯೆ ಕೇಳಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ 2019 ಸೆ.21ರಂದು ಚಿನ್ಮಯಾನಂದ ಅವರನ್ನು ವಿಶೇಷ ತನಿಖಾ ತಂಡವು ಬಂಧಿಸಿತ್ತು. 23 ವರ್ಷದ ವಿದ್ಯಾರ್ಥಿಯ ವಿರುದ್ಧವೂ ಹಣ ಸುಲಿಗೆ ಆರೋಪದಡಿ ಪ್ರಕರಣ ದಾಖಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.