ನವದೆಹಲಿ: ‘ಪರಿಶಿಷ್ಟ ಜಾತಿ ಹಾಗೂ ಪರಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ರದ್ದುಗೊಳಿಸುವ ಪ್ರಸ್ತಾಪ ಇಲ್ಲ’ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಯೋಜನೆಯು 2025–26ರಲ್ಲಿಯೂ ಮುಂದುವರಿಯುವ ಕುರಿತು ಕಳವಳ ವ್ಯಕ್ತವಾಗಿತ್ತು.
ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ರಾಮದಾಸ್ ಅಠವಳೆ, ‘ಉನ್ನತ ಶಿಕ್ಷಣದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಒಟ್ಟು ದಾಖಲಾತಿ ಅನುಪಾತ (ಜಿಇಆರ್) ಹೆಚ್ಚಿಸುವ ಉದ್ದೇಶವನ್ನು ಯೋಜನೆ ಹೊಂದಿದೆ. ಯಾವುದೇ ಕಾರಣಕ್ಕೂ ಯೋಜನೆಯನ್ನು ರದ್ದುಗೊಳಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.
ಸಂಪುಟ ಹಾಗೂ ವೆಚ್ಚಕ್ಕೆ ಸಂಬಂಧಿಸಿದ ಆರ್ಥಿಕ ಸಮಿತಿಯ ಅರ್ಹತೆಯನ್ನು ಆಧರಿಸಿ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, 2025–26ರವರೆಗೂ ಮಾನ್ಯತೆ ಹೊಂದಿದೆ. ಇದರ ಅಡಿಯಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಶೇಕಡ 60 ಹಾಗೂ ರಾಜ್ಯ ಸರ್ಕಾರ ಶೇಕಡಾ 40ರಷ್ಟು ಅನುದಾನ ಒದಗಿಸುತ್ತದೆ. ಈಶಾನ್ಯ ರಾಜ್ಯಗಳಲ್ಲಿ ಈ ಯೋಜನೆ ಜಾರಿಗೆ ಕೇಂದ್ರ ಸರ್ಕಾರವೇ ಶೇಕಡಾ 90ರಷ್ಟು ಅನುದಾನ ಒದಗಿಸುತ್ತದೆ. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕೇಂದ್ರ ಶೇಕಡ 75 ಹಾಗೂ ರಾಜ್ಯ ಸರ್ಕಾರವು ಶೇಕಡ 25ರಷ್ಟು ಹಣ ನೀಡುತ್ತದೆ.
ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್(ಎನ್ಎಸ್ಪಿ) ಅಡಿಯಲ್ಲಿ ಆಧಾರ್ ಸಂಖ್ಯೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯನ್ನು ನೋಂದಣಿ ಮಾಡಿದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಶೇ 40ರಷ್ಟು ಮೊತ್ತವನ್ನು ಬಿಡುಗಡೆಗೊಳಿಸಿದ ಬಳಿಕ ಕೇಂದ್ರ ಸರ್ಕಾರವು ನೇರವಾಗಿ ಫಲಾನುಭವಿಗಳ ಖಾತೆಗೆ ಉಳಿಕೆ ಹಣ ಬಿಡುಗಡೆ ಮಾಡುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.