ADVERTISEMENT

ಇಡಬ್ಲ್ಯುಎಸ್‌ ಅಭ್ಯರ್ಥಿಗಳ ಮೀಸಲಾತಿ ಪ್ರಶ್ನಿಸಿದ್ದ ಪಿಐಎಲ್‌ ವಿಚಾರಣೆ ರದ್ದು

ಇಡಬ್ಲ್ಯುಎಸ್‌ ಅಭ್ಯರ್ಥಿಗಳಿಗೆ ಶೇ 10ರಷ್ಟು ಮೀಸಲಾತಿ ಪ್ರಶ್ನಿಸಿ ಪಿಐಎಲ್‌

ಪಿಟಿಐ
Published 24 ಸೆಪ್ಟೆಂಬರ್ 2021, 11:21 IST
Last Updated 24 ಸೆಪ್ಟೆಂಬರ್ 2021, 11:21 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ಆರ್ಥಿಕವಾಗಿ ದುರ್ಬಲ ವರ್ಗಗಳ (ಇಡಬ್ಲ್ಯುಎಸ್‌ ) ಅಭ್ಯರ್ಥಿಗಳಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್‌ ಕುರಿತುಕೇರಳ ಹೈಕೋರ್ಟ್‌ ವಿಚಾರಣೆ ನಡೆಸುವುದಕ್ಕೆ ಸುಪ್ರೀಂಕೋರ್ಟ್‌ ಶುಕ್ರವಾರ ತಡೆ ನೀಡಿದೆ.

ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ಅವರಿರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು, ಕೇರಳ ಹೈಕೋರ್ಟ್‌ನ ವಿಚಾರಣೆಗೆ ತಡೆ ನೀಡಬೇಕು ಹಾಗೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿರುವ ನುಜೈಮ್‌ ಪಿ.ಕೆ ಅವರಿಗೆ ನೋಟಿಸ್‌ ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.

ADVERTISEMENT

'ಇದೇ ವಿಷಯವಾಗಿ ಹಲವಾರು ಅರ್ಜಿಗಳು ಸುಪ್ರೀಂಕೋರ್ಟ್‌ ಮುಂದಿದ್ದು, ವಿಚಾರಣೆ ಬಾಕಿ ಇದೆ. ಕೇರಳ ಹೈಕೋರ್ಟ್‌ನಲ್ಲಿನ ಈ ಅರ್ಜಿಯನ್ನು ಸುಪ್ರೀಂಕೋರ್ಟ್‌ಗೆ ವರ್ಗಾಯಿಸಬೇಕು. ಇದರಿಂದ ಒಟ್ಟಿಗೇ ಎಲ್ಲ ಅರ್ಜಿಗಳ ವಿಚಾರಣೆ ಸಾಧ್ಯವಾಗುವುದು’ ಎಂದೂ ಮೆಹ್ತಾ ಮನವಿ ಮಾಡಿದರು.

ಕೇಂದ್ರದ ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ, ಅರ್ಜಿದಾರ ಹಾಗೂ ಸಂಬಂಧಪಟ್ಟವರಿಗೆ ನೋಟಿಸ್‌ ಜಾರಿ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.