ನವದೆಹಲಿ: ಸಾಮಾಜಿಕ, ವಾಣಿಜ್ಯ, ವಿವಾಹ ಅಥವಾ ಇತರ ಕಾರ್ಯಕ್ರಮಗಳಿಗೆ ಉದ್ಯಾನಗಳ ಬಳಕೆಯನ್ನು ನಿಷೇಧಿಸಿ ರಾಷ್ಟ್ರೀಯ ಹಸಿರು ಪೀಠ (ಎನ್ಜಿಟಿ) ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ವಿಧಿಸಿದೆ.
ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠವು, ಯಾವುದೇ ಸಂದರ್ಭದಲ್ಲಿಯೂ ತಿಂಗಳಿಗೆ 10 ದಿನಗಳಿಗಿಂತ ಹೆಚ್ಚು ಕಾಲ ಪಾರ್ಕ್ ಅನ್ನು ಆ ಉದ್ದೇಶಗಳಿಗೆ ಬಳಸಲು ಅನುಮತಿಸುವುದಿಲ್ಲ ಎಂದು ಹೇಳಿತು.
ಸ್ಥಳೀಯ ನಗರಾಡಳಿತ ಸಂಸ್ಥೆಗಳ ವಿರುದ್ಧ ಎನ್ಜಿಟಿ ಫೆಬ್ರುವರಿ 4ರಂದು ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ಉತ್ತರ ದೆಹಲಿ ಮತ್ತು ದಕ್ಷಿಣ ದೆಹಲಿಯ ಮುನಿಸಿಪಲ್ ಕಾರ್ಪೋರೇಷನ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಮೇಲ್ಮನವಿ ಸಲ್ಲಿಸಿದವರಿಗೆ ಯಾವುದೇ ಸೂಚನೆ ನೀಡದೆ, ಎನ್ಜಿಟಿ ಆದೇಶ ಹೊರಡಿಸಿದೆ ಎಂದರು.
ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರಿಗೂ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಸೂಚಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.