ನವದೆಹಲಿ:ರಫೇಲ್ ಯುದ್ಧ ವಿಮಾನ ಖರೀದಿ ವಿಚಾರವಾಗಿ ತನಿಖೆಗೆ ಆದೇಶಿಸಬೇಕು ಎಂದುಕೇಂದ್ರದ ಮಾಜಿ ಸಚಿವರಾದಯಶವಂತ್ ಸಿನ್ಹಾ,ಅರುಣ್ ಶೌರಿ ಸೇರಿದಂತೆ ಹಲವರು ಸಲ್ಲಿಸಿರುವ ಮೇಲ್ಮನವಿ ಹಾಗೂ ಒಪ್ಪಂದದನಿರ್ಧಾರ ಪ್ರಕ್ರಿಯೆಗೆಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಲ್ಲಿಸಿರುವ ವಿವರಗಳ ಮೇಲಿನ ನಿರ್ಣಾಯಕ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಬುಧವಾರ) ನಡೆಸಲಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಹಾಗೂ ಕೆ.ಎಂ.ಜೋಸೆಫ್ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.
ರಫೇಲ್ ಒಪ್ಪಂದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ಗೊಗೊಯಿ ನೇತೃತ್ವದ ಪೀಠ ಅರ್ಜಿದಾರರಿಗೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಅಕ್ಟೋಬರ್ 31 ರಂದು ಆದೇಶಿಸಿತ್ತು.
ಬಳಿಕ ಕೇಂದ್ರ ಸರ್ಕಾರವು‘36 ರಫೇಲ್ ಯುದ್ಧ ವಿಮಾನ ಖರೀದಿ ನಿರ್ಧಾರ ಪ್ರಕ್ರಿಯೆ ವಿವರ’ ಎಂಬ ಶೀರ್ಷಿಕೆ ಅಡಿಯಲ್ಲಿ 14 ಪುಟಗಳ ದಾಖಲೆಯನ್ನು ಸೋಮವಾರ ಸುಪ್ರೀಂಗೆ ಸಲ್ಲಿಸಿತ್ತು.
ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಡಸಾಲ್ಟ್,ಅನಿಲ್ ಅಂಬಾನಿ ಅವರ ‘ರಕ್ಷಣಾ ಕಂಪೆನಿ’ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಕೇಂದ್ರ ಸಚಿವರೂ ಇದರಲ್ಲಿ ಭಾಗಿಯಾಗಿದ್ದು, ಇದು ದೇಶದ ಅತ್ಯಂತ ದೊಡ್ಡ ರಕ್ಷಣಾ ಹಗರಣ. ಹಗರಣವನ್ನು ಮುಚ್ಚಿ ಹಾಕಲು ಕೇಂದ್ರ ಸರ್ಕಾರವು ಪ್ರಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.