ADVERTISEMENT

ದೇಶದ್ರೋಹ ಕಾನೂನು ರದ್ದು: ಅರ್ಜಿ ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 6 ಮೇ 2022, 6:05 IST
Last Updated 6 ಮೇ 2022, 6:05 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ದೇಶದ್ರೋಹ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿರುವ ಅರ್ಜಿಗಳನ್ನು ವಿಸ್ತೃತ ಸಂವಿಧಾನ ಪೀಠಕ್ಕೆ ವರ್ಗಾಯಿಸುವ ಸಂಬಂಧ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ.

ದೇಶದ್ರೋಹ ಕಾನೂನನ್ನು ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆ ವೇಳೆ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠವು, ಇದೇ10ರಂದು ಈ ವಿಚಾರಣೆ ನಡೆಸುವುದಾಗಿ ಹೇಳಿದೆ.

ಇದಕ್ಕೂ ಮುನ್ನ ಈ ಅರ್ಜಿಗಳನ್ನೇ ವಜಾ ಮಾಡಬೇಕು ಎಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಅಟಾರ್ನಿ ಜನರಲ್ ಕೆ.ಕೆ.ವೇಣು
ಗೋಪಾಲ್ ವಾದಿಸಿದರು. ‘ಈ ಕಾನೂನು ಸಂವಿಧಾನಬದ್ಧವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಭದ್ರತೆಯನ್ನು ಕೇದಾರನಾಥ್ ಪ್ರಕರಣದಲ್ಲೇ ಸ್ಪಷ್ಟಪಡಿಸಲಾಗಿದೆ. ಈ ಕಾನೂನಿನ ದುರ್ಬಳಕೆಯನ್ನು ತಡೆಯಲು ನ್ಯಾಯಾಲಯವು ಮಾರ್ಗಸೂಚಿಗಳನ್ನು ಹೊರಡಿಸಬಹುದು’ ಎಂದು ಅವರು ಪ್ರತಿಪಾದಿಸಿದರು. ಜತೆಗೆ ಅರ್ಜಿಗಳನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವುದನ್ನು ವಿರೋಧಿಸಿದರು.

ADVERTISEMENT

ಅರ್ಜಿದಾರರ ಪರವಾಗಿ ಹಾಜರಿದ್ದ ಕಪಿಲ್ ಸಿಬಲ್ ಅವರು,‘ಈ ಕಾನೂನಿನ ಹಲವು ಅಂಶಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿರ್ಬಂಧಿಸುತ್ತವೆ. ಕೇದಾರನಾಥ್ ಪ್ರಕರಣದ ತೀರ್ಪಿನ ನಂತರ ಹಲವು ದಶಕಗಳು ಕಳೆದಿವೆ, ಸಾಕಷ್ಟು ಬದಲಾವಣೆಯಾಗಿದೆ’ ಎಂದು
ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.