ನವದೆಹಲಿ: ಬಳಕೆದಾರರ ದತ್ತಾಂಶವನ್ನು ಫೇಸ್ಬುಕ್ ಹಾಗೂ ಇತರರೊಂದಿಗೆ ಹಂಚಿಕೊಳ್ಳುವ ಕುರಿತ ವಾಟ್ಸ್ಆ್ಯಪ್ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕೊ ಅಥವಾ ಕೇಂದ್ರ ಸರ್ಕಾರವು ದತ್ತಾಂಶ ಭದ್ರತಾ ಮಸೂದೆ ಮಂಡಿಸುವವರೆಗೂ ಕಾಯಬೇಕೊ ಎಂಬುದರ ಕುರಿತು ತಾನು ನಿರ್ಧಾರ ಕೈಗೊಳ್ಳುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.
ಕೇಂದ್ರ ಸರ್ಕಾರದ ಪರವಾಗಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಈ ಬಾರಿಯ ಸಂಸತ್ ಅಧಿವೇಶನದ ದ್ವಿತೀಯಾರ್ಧದಲ್ಲಿ ದತ್ತಾಂಶ ಭದ್ರತಾ ಮಸೂದೆ ಮಂಡಿಸುವ ಸಾಧ್ಯತೆ ಇದೆ’ ಎಂದು ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಐವರು ಸದಸ್ಯರನ್ನೊಳಗೊಂಡ ಸಾಂವಿಧಾನಿಕ ಪೀಠಕ್ಕೆ ಮಾಹಿತಿ ನೀಡಿದರು.
‘ಮಸೂದೆ ಮಂಡಿಸುವವರೆಗೆ ಕಾಯಲು ಯಾವುದೇ ತೊಂದರೆ ಇಲ್ಲ’ ಎಂದು ಹೇಳಿದ ನ್ಯಾಯಪೀಠವು ಬುಧವಾರ ಈ ಕುರಿತ ವಿಚಾರಣೆ ನಡೆಸುವುದಾಗಿ ತಿಳಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.