ನವದೆಹಲಿ: ಕರ್ತವ್ಯಲೋಪ ಪ್ರಕರಣದಲ್ಲಿ ಸಂಬಂಧಿತ ಶಿಸ್ತು ಪ್ರಾಧಿಕಾರ ಕೈಗೊಂಡ ಶಿಸ್ತುಕ್ರಮ ಅಂತಿಮವೇ ಅಥವಾ ಹೆಚ್ಚಿನ ಶಿಕ್ಷೆಗೆ ಗುರಿಪಡಿಸಲು ಪ್ರಕರಣವನ್ನುಕರ್ನಾಟಕ ಲೋಕಾಯುಕ್ತ ಮತ್ತೆ ವಿಚಾರಣೆಗೆ ಒಳಪಡಿಸಬಹುದೇ ಎಂಬ ಪ್ರಶ್ನೆಗೆ ಸಂಬಂಧಿಸಿದ ಪ್ರಕರಣ ಈಗ ಸುಪ್ರೀಂ ಕೋರ್ಟ್ ಮುಂದಿದೆ.
ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಹೃಷಿಕೇಶ್ ರಾಯ್ ಅವರಿದ್ದ ನ್ಯಾಯಪೀಠವು ಪ್ರಕರಣ ಸಂಬಂಧ ಕರ್ನಾಟಕ ಸರ್ಕಾರ, ಬೆಂಗಳೂರು ಮಹಾನಗರಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಲೋಕಾಯುಕ್ತ ಈ ಸಂಬಂಧ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಲೋಕಾಯುಕ್ತ ಪರ ವಕೀಲ ನಿಶಾಂತ್ ಪಾಟೀಲ್ ಅವರು, ಅರ್ಜಿಯಲ್ಲಿ ಹೈಕೋರ್ಟ್ ಮೇ 5, 2020ರಂದು ನೀಡಿದ್ದ ಆದೇಶದ ಸಿಂಧುತ್ವ ಪ್ರಶ್ನಿಸಿದ್ದಾರೆ. ಲಂಚ ಪಡೆದ ಪ್ರಕರಣದಲ್ಲಿ ಬಿಬಿಎಂಪಿ ತಮಗೆ ಈಗಾಗಲೇ ಶಿಕ್ಷೆ ವಿಧಿಸಿದೆ ಎಂದು ದಿವಾಕರ್ ವಿ ಎಂಬುವರ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿತ್ತು.
ಈ ಸಂಬಂಧ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಕರ್ನಾಟಕ ಲೋಕಾಯುಕ್ತ, ದೊಡ್ಡ ಪ್ರಮಾಣದ ದುರ್ವರ್ತನೆಗೆ ಸಣ್ಣ ಪ್ರಮಾಣದ ದಂಡ ವಿಧಿಸಲಾಗಿದೆ. ನಿಯಮಗಳ ಪ್ರಕಾರ, ನೌಕರನ ವಿರುದ್ಧ ಯಾವುದೇ ಹಂತದಲ್ಲಿ ಶಿಸ್ತುಸಮಿತಿಯಿಂದ ವಿಚಾರಣೆಯೂ ಆಗಿಲ್ಲ ಎಂದು ಪ್ರತಿಪಾದಿಸಿತ್ತು.
ಲಂಚ ಪಡೆಯುವಾಗ ಪ್ರತ್ಯಕ್ಷವಾಗಿ ಸಿಕ್ಕಿಬಿದ್ದ ಪ್ರಕರಣದಲ್ಲಿಯೂ ಸರ್ಕಾರಿ ನೌಕರನಿಗೆ ಸಣ್ಣ ಪ್ರಮಾಣದ ದಂಡ ವಿಧಿಸುವುದಾದರೆ ಸಾಂವಿಧಾನಿಕ ಮತ್ತು ಶಾಸನಬದ್ಧ ಸಂಸ್ಥೆಗಳ ಬಗ್ಗೆ ಸಾರ್ವಜನಿಕರ ದೃಷ್ಟಿಯಿಂದ ವಿಶ್ವಾಸಾರ್ಹತೆಗೆ ಧಕ್ಕೆ ಆಗಲಿದೆ ಎಂದು ವಕೀಲರು ಪ್ರತಿಪಾದಿಸಿದ್ದರು. ಉಲ್ಲೇಖಿತ ಪ್ರಕರಣದಲ್ಲಿ ಇಡೀ ವ್ಯವಸ್ಥೆಯೇ ನೌಕರನ ಪರವಾಗಿದೆ. ಅವರ ಕಾನೂನು ಬಾಹಿರ ಕ್ರಮಗಳ ಪರವಾಗಿ ಇದ್ದಂತಿದೆ ಎಂದು ಅರ್ಜಿಯಲ್ಲಿ ಅಭಿಪ್ರಾಯಪಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.