ನವದೆಹಲಿ:2002ರ ಗುಜರಾತ್ ಕೋಮುಗಲಭೆ ಪ್ರಕರಣದಲ್ಲಿ ‘ಮುಗ್ಧರನ್ನು ಬಂಧಿಸಲು’ ನಕಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿರುವ ಆರೋಪದಲ್ಲಿ ಬಂಧಿತವಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆ. 1ರಂದು ನಡೆಸಲಿದೆ.
ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್, ನ್ಯಾಯಮೂರ್ತಿಗಳಾದ ಎಸ್. ರವೀಂದ್ರ ಭಟ್ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ನ್ಯಾಯಪೀಠವು ಮಂಗಳವಾರ ಮಧ್ಯಾಹ್ನ 3.45ಕ್ಕೆ ಅರ್ಜಿಯ ವಿಚಾರಣೆಯನ್ನು ಆರಂಭಿಸಬೇಕಿತ್ತು. ಆದರೆ, ಸಮಯದ ಅಭಾವದಿಂದ ಪ್ರಕರಣದ ವಿಚಾರಣೆಯನ್ನು ಸೆ.1ರಂದು ಮಧ್ಯಾಹ್ನ 3ಕ್ಕೆ ನಡೆಸಲಾಗುವುದು ಎಂದು ನ್ಯಾಯಪೀಠವು ಆದೇಶ ನೀಡಿತು.
ಜಾಮೀನು ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗುಜರಾತ್ ಸರ್ಕಾರವು, ‘ಹಿರಿಯ ರಾಜಕೀಯ ನಾಯಕರ ಆಜ್ಞೆಯ ಮೇರೆಗೆ ತೀಸ್ತಾ ಅವರು ಇತರರೊಂದಿಗೆ ಸೇರಿ ‘ಸಂಚು’ ರೂಪಿಸಿದ್ದಾರೆ. ಅಷ್ಟೇ ಅಲ್ಲ, ತೀಸ್ತಾ ಅವರು ಆ ರಾಜಕೀಯ ನಾಯಕರೊಂದಿಗೆ ಸಭೆಯನ್ನೂ ನಡೆಸಿ, ಇದಕ್ಕೆ ಸಂಬಂಧಿಸಿದಂತೆ ಬೃಹತ್ ಮೊತ್ತದ ಹಣವನ್ನೂ ಪಡೆದಿದ್ದಾರೆ’ ಎಂದು ಆರೋಪ ಮಾಡಿದೆ.
ಈ ಪ್ರಕರಣದಲ್ಲಿ ಜೂನ್ನಲ್ಲಿ ಬಂಧನಕ್ಕೊಳಗಾಗಿದ್ದ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆಗಸ್ಟ್ 22ರಂದು ಗುಜರಾತ್ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.