ADVERTISEMENT

ಕೋವಿಡ್ ನಿರ್ವಹಣೆ: 'ರಾಷ್ಟ್ರೀಯ ಯೋಜನೆ'ಯ ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

ಪಿಟಿಐ
Published 22 ಏಪ್ರಿಲ್ 2021, 8:47 IST
Last Updated 22 ಏಪ್ರಿಲ್ 2021, 8:47 IST
ಸುಪ್ರೀಂ ಕೋರ್ಟ್‌ (ಪಿಟಿಐ ಚಿತ್ರ) 
ಸುಪ್ರೀಂ ಕೋರ್ಟ್‌ (ಪಿಟಿಐ ಚಿತ್ರ)    

ನವದೆಹಲಿ: ದೇಶವು ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ತತ್ತರಿಸುತ್ತಿದ್ದು, ಈ ಕಠೋರ ಪರಿಸ್ಥಿತಿಯ ಬಗ್ಗೆ ಮನಗಂಡಿರುವ ಸುಪ್ರೀಂ ಕೋರ್ಟ್, ಗುರುವಾರ ಸುಮೊಟೊ ಪ್ರಕರಣ ದಾಖಲಿಸಿಕೊಂಡಿದೆ.

ಕೋವಿಡ್ ರೋಗಿಗಳಿಗೆ ಅತ್ಯಗತ್ಯವಾಗಿ ಬೇಕಾಗಿರುವ ಆಮ್ಲಜನಕ ಪೂರೈಕೆ ಮತ್ತು ಔಷಧಿಗಳ ಸರಬರಾಜು ಸೇರಿದಂತೆ ಕೋವಿಡ್ ನಿರ್ವಹಣೆಯ ಕುರಿತಾದ ‘ರಾಷ್ಟ್ರೀಯ ಯೋಜನೆ’ ವರದಿಯನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೊಬಡೆ ನೇತೃತ್ವದ ನ್ಯಾಯಪೀಠವು, ದೇಶದಲ್ಲಿ ಕೋವಿಡ್ -19 ಲಸಿಕೆ ವಿತರಣೆಯ ವಿಧಾನ ಮತ್ತು ಇದಕ್ಕೆ ಸಂಬಂಧಿಸಿದ ವಿಷಯಗಳನ್ನು ಸಹ ಪರಿಗಣಿಸುವುದಾಗಿ ತಿಳಿಸಿದೆ.

ADVERTISEMENT

ನ್ಯಾಯಮೂರ್ತಿಗಳಾದ ಎಲ್. ಎನ್. ರಾವ್ ಮತ್ತು ಎಸ್. ಆರ್. ಭಟ್ ಅವರನ್ನೂ ಒಳಗೊಂಡ ನ್ಯಾಯಪೀಠವು, ಕೊರೊನಾ ಸಾಂಕ್ರಾಮಿಕ ರೋಗದ ಉಲ್ಬಣದ ಸಂದರ್ಭದಲ್ಲಿ ಲಾಕ್‌ಡೌನ್ ಘೋಷಿಸಲು ಹೈಕೋರ್ಟ್‌ಗಳ ಅಧಿಕಾರಕ್ಕೆ ಸಂಬಂಧಿಸಿದ ಅಂಶವನ್ನೂ ಪರಿಶೀಲಿಸುವುದಾಗಿ ಹೇಳಿದೆ.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಹರೀಶ್ ಸಾಲ್ವೆ ಅವರನ್ನು ಪ್ರಕರಣದಲ್ಲಿ ನ್ಯಾಯಾಲಯಕ್ಕೆ ನೆರವಾಗಲು ಅಮಿಕಸ್ ಕ್ಯೂರಿಯಾಗಿ ನೇಮಕ ಮಾಡಲಾಗಿದೆ.

ಸುಮೊಟೊ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಪೀಠವು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದು, ಶುಕ್ರವಾರ ಈ ಕುರಿತಂತೆ ವಿಚಾರಣೆ ನಡೆಸುವುದಾಗಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.