ಕೋಲ್ಕತ್ತ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ವಿರುದ್ಧ ಕಾಲಮಿತಿಯೊಳಗೆ ತನಿಖೆಯಾಗಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಒತ್ತಾಯಿಸಿದೆ.
ಯಾವ ನಾಯಕರೇ ಆಗಿರಲಿ, ತಪ್ಪೆಸಗಿದ್ದರೆ ಪಕ್ಷವು ರಾಜಕೀಯವಾಗಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಟಿಎಂಸಿ ಹೇಳಿದೆ.
ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಜುಲೈ 22ರಂದು ಪಶ್ಚಿಮ ಬಂಗಾಳದ ಹಲವೆಡೆ ಶೋಧ ನಡೆಸಿತ್ತು. ಪಾರ್ಥ ಚಟರ್ಜಿ ಹಾಗೂ ಅವರ ಆಪ್ತರಾದ ಅರ್ಪಿತಾ ಮುಖರ್ಜಿ ಅವರನ್ನು ಇ.ಡಿ. ಅಧಿಕಾರಿಗಳು ಶನಿವಾರ ಬಂಧಿಸಿದ್ದರು.
ಈ ವಿಚಾರವಾಗಿ ವರದಿಗಾರರ ಜತೆ ಮಾತನಾಡಿದ ಟಿಎಂಸಿ ವಕ್ತಾರ ಕುನಾಲ್ ಘೋಷ್, ಅರ್ಪಿತಾ ಮುಖರ್ಜಿಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಅರ್ಪಿತಾ ಮುಖರ್ಜಿ ಮನೆ ಮೇಲೆ ಶುಕ್ರವಾರ ದಾಳಿ ನಡೆಸಿದ್ದ ಇ.ಡಿ. ಅಧಿಕಾರಿಗಳು ₹20 ಕೋಟಿ ನಗದನ್ನು ವಶಕ್ಕೆ ಪಡೆದಿದ್ದರು.
‘ಕಾಲಮಿತಿಯೊಳಗೆ ತನಿಖೆಯಾಗಬೇಕೆಂದು ಪಕ್ಷವು ಆಗ್ರಹಿಸುತ್ತದೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ಟಿಎಂಸಿ ಮಧ್ಯ ಪ್ರವೇಶಿಸುವುದಿಲ್ಲ’ ಎಂದು ಘೋಷ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.