ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಹೀಗಾಗಿ ದೀಪಾವಳಿಗಿಂತ ಮುನ್ನ ಶಾಲೆಗಳನ್ನು ತೆರೆಯಲಾಗದು ಎಂದು ಮಹಾರಾಷ್ಟ್ರದ ಪ್ರಾಥಮಿಕ ಶಾಲಾ ಶಿಕ್ಷಣ ಸಚಿವ ವರ್ಷಾ ಗಾಯಕ್ವಾಡ್ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಈವರೆಗೆ 15.17 ಲಕ್ಷ ಪ್ರಕರಣಗಳು ವರದಿಯಾಗಿದ್ದು,40,040 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೊರೊನಾ ಪ್ರಸರಣವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮಾರ್ಚ್ 16ರಂದು ದೇಶದಾದ್ಯಂತ ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ನಿರ್ದೇಶನ ನೀಡಿತ್ತು. ಇದೀಗ ಇದೇ 15 ರ ಬಳಿಕ ಶಾಲೆಗಳನ್ನು ತೆರೆಯಲು ಕೇಂದ್ರ ಅನುಮತಿ ನೀಡಿದ್ದು, ಈ ಬಗ್ಗೆ ರಾಜ್ಯ ಸರ್ಕಾರಗಳಿಗೆ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದೆ.
‘ಶಾಲೆಗಳು ವರ್ಚುವಲ್ ತರಗತಿಗಳನ್ನು ನಡೆಸುತ್ತಿವೆ. ಕೆಲವು ಪ್ರದೇಶಗಳಲ್ಲಿ ವಿದ್ಯಾರ್ಥಿಗಳಿಗಾಗಿ ಶಿಕ್ಷಕರು ವಿಶೇಷ ತರಗತಿಗಳನ್ನು ನಡೆಸುತ್ತಿದ್ದಾರೆ. ಈ ಶೈಕ್ಷಣಿಕ ವರ್ಷ ಮತ್ತು ವಿದ್ಯಾರ್ಥಿಗಳ ಮೌಲ್ಯಮಾಪನ ದೊಡ್ಡ ಸವಾಲಾಗಿದೆ. ಸರ್ಕಾರ ಈ ಬಗ್ಗೆ ಹಲವು ವಿಶ್ಲೇಷಣೆ ನಡೆಸುತ್ತಿದೆ. ಹೀಗಾಗಿ ದೀಪಾವಳಿಗಿಂತ ಮೊದಲು ಶಾಲೆಗಳನ್ನು ಆರಂಭಿಸುವುದಿಲ್ಲ’ ಎಂದು ಗಾಯಕ್ವಾಡ್ ಹೇಳಿದ್ದಾರೆ.
‘ಕೋವಿಡ್ ನಿಯಂತ್ರಣಕ್ಕೆ ಬರುವ ತನಕ ಕಾಲೇಜುಗಳನ್ನು ತೆರೆಯುವುದಿಲ್ಲ. ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಕಠಿಣ ಪರಿಸ್ಥಿತಿ ಎದುರಾಗಿದೆ. ಅವರ ಭವಿಷ್ಯ ನಮ್ಮ ನಿರ್ಧಾರದ ಮೇಲೆ ಅವಲಂಬಿತವಾಗಿದೆ’ ಎಂದು ಮಹಾರಾಷ್ಟ್ರದಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್ ಸಮಂತ್ ಅವರು ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.