ADVERTISEMENT

ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮರುವಿಮರ್ಶೆ ಅರ್ಜಿ ತ್ರಿಸದಸ್ಯ ಪೀಠಕ್ಕೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2019, 20:00 IST
Last Updated 13 ಸೆಪ್ಟೆಂಬರ್ 2019, 20:00 IST
   

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಸಿ/ಎಸ್‌ಟಿ) ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಗೆ ಸಂಬಂಧಿಸಿ 2018ರ ಮಾರ್ಚ್‌ 20ರಂದು ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪು ಮರುಪರಿಶೀಲನೆ ಕೋರಿ ಕೇಂದ್ರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮೂವರು ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಲಾಗಿದೆ. ಈ ತೀರ್ಪಿನ ಮೂಲಕ ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಸಮಸ್ಯಾತ್ಮಕವಾಗಿದೆ. ಹಾಗಾಗಿ ತೀರ್ಪಿನ ಮರುಪರಿಶೀಲನೆ ನಡೆಯಬೇಕು ಎಂದು ಕೇಂದ್ರ ಕೋರಿತ್ತು. ಅರ್ಜಿಯ ಮೇಲಿನ ತೀರ್ಪನ್ನು ಕೋರ್ಟ್‌ ಮೇ 1ರಂದು ಕಾಯ್ದಿರಿಸಿತ್ತು. ದೇಶದಲ್ಲಿನ ಕಾನೂನುಗಳು ಜಾತಿ ಆಧರಿತ ಆಗಿರಬಾರದು ಮತ್ತು ಏಕರೂಪದ್ದಾಗಿರಬೇಕು ಎಂಬ ಅಭಿಪ್ರಾಯವನ್ನು ಪೀಠವು ವ್ಯಕ್ತಪಡಿಸಿತ್ತು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘಟನೆಗಳು ತೀರ್ಪಿನ ವಿರುದ್ಧ ದೇಶದಾದ್ಯಂತ ಭಾರಿ ಪ್ರತಿಭಟನೆ ನಡೆಸಿದ್ದವು. ಇದರಿಂದ ಒತ್ತಡಕ್ಕೆ ಒಳಗಾದ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ತೀರ್ಪನ್ನು ತಟಸ್ಥಗೊಳಿಸುವ ರೀತಿಯಲ್ಲಿ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಹಾಗಾಗಿ, ಕೇಂದ್ರ ಸಲ್ಲಿಸಿದ ಮರುಪರಿಶೀಲನಾ ಅರ್ಜಿಯೇ ಅರ್ಥಹೀನ ಎಂದು ತಜ್ಞರು ಹೇಳುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.